ಮಳೆಗಾಲದಲ್ಲಿ ಮಕ್ಕಳಿಗೆ ತೊಂದರೆ ಆದರೆ ಬಿಇಓ, ಡಿಡಿಪಿಐ ಜವಾಬ್ದಾರರು: ಸಿಇಓ ಭುವನೇಶ ಪಾಟೀಲ

Children face problems during monsoon but BEO, DDPI are responsible: CEO Bhuvanesh Patil

ಮಳೆಗಾಲದಲ್ಲಿ ಮಕ್ಕಳಿಗೆ ತೊಂದರೆ ಆದರೆ ಬಿಇಓ, ಡಿಡಿಪಿಐ ಜವಾಬ್ದಾರರು: ಸಿಇಓ ಭುವನೇಶ ಪಾಟೀಲ 

ಧಾರವಾಡ ಜೂ.06: ಮಳೆಗಾಲದಲ್ಲಿ ಜಿಲ್ಲೆಯ ಯಾವುದೇ ಶಾಲೆಯಲ್ಲಿ ಮಕ್ಕಳ ಪಾಠಕ್ಕೆ ತೊಂದರೆ ಉಂಟಾದರೆ ಆಯಾ ತಾಲೂಕಿನ ಬಿಇಓ, ಡಿಡಿಪಿಐ ಅವರನ್ನು ಜವಾಬ್ದಾರಿಗೊಳಿಸಿ, ಕ್ರಮಕೈಗೊಳ್ಳಲಾಗುವುದು. ಎಲ್ಲ ಕ್ಷೇತ್ರಶಿಕ್ಷಣಾಧಿಕಾರಿಗಳು ಪ್ರತಿ ಶಾಲೆಗೆ ಭೇಟಿ ನೀಡಿ, ವಾಸ್ತವಿಕ ವರದಿ ಪಡೆದು, ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಹೇಳಿದರು. 

ಅವರು ಇಂದು ಬೆಳಿಗ್ಗೆ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಶಾಲಾ ಕಟ್ಟಡಗಳ ಕಾಮಗಾರಿ ಹಾಗೂ ಕೊಠಡಿಗಳ ದುರಸ್ತಿ ಕುರಿತು ಶಿಕ್ಷಣ ಇಲಾಖೆ ಹಾಗೂ ವಿವಿಧ ಅನುಷ್ಠಾನ ಏಜನ್ಸಿಗಳ ಅಧಿಕಾರಿಗಳೊಂದಿಗೆ ಪ್ರಗತಿ ಪರೀಶೀಲನಾ ಸಭೆ ಜರುಗಿಸಿ, ಮಾತನಾಡಿದರು. 

ಈಗಾಗಲೇ ಶಾಲೆಗಳು ಆರಂಭಾಗಿವೆ. ಹವಾಮಾನ ಇಲಾಖೆಯ ಸೂಚನೆ ಪ್ರಕಾರ ಮುಂದಿನ ದಿನಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಆದ್ದರಿಂದ ಮಕ್ಕಳಿಗೆ ತೊಂದರೆ ಆಗದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಇಂದೇ ಈ ಕುರಿತು ಕ್ರಿಯಾಯೋಜನೆ ರೂಪಿಸಿ, ಬರುವ ಜುಲೈ 15 ರೊಳಗೆ ಸೋರಿಕೆ ಆಗುವ ಮತ್ತು ಶಿಥಿಲಾವಸ್ಥೆಯ ಮಾಳಿಗೆ, ಗೋಡೆಗಳನ್ನು ದುರಸ್ತಿಗೊಳಿಸಿ, ವರದಿ ಸಲ್ಲುಸಬೇಕೆಂದು ಅವರು ನಿರ್ದೇಶನ ನೀಡಿದರು. 

ಈಗಾಗಲೇ ಹಲವಾರು ಬಾರಿ ಈ ಕುರಿತು ಸೂಚನೆ ನೀಡಿದ್ದರೂ, ಸರಿಯಾದ ಪಾಲನೆ ಆಗಿಲ್ಲ. ಶಾಲೆಯ ಸೋರಿಕೆ ಅಥವಾ ಶಿಥಿಲ ಕಟ್ಟಡದಿಂದ ಯಾವುದೇ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾದರೆ, ಅದನ್ನು ಗಂಭೀರವಾಗಿ ಪರಿಗಣಿಸಿ, ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಇಓ ಎಚ್ಚರಿಸಿದರು. 

ಶಾಲಾ ಶಿಕ್ಷಣ ಇಲಾಖೆ ಸಲ್ಲಿಸಿರುವ ಮಾಹಿತಿ ಪ್ರಕಾರ ಪ್ರಸಕ್ತ ಸಾಲಿಗೆ ದುರಸ್ತಿಗಾಗಿ ಜಿಲ್ಲೆಯ 147 ಶಾಲೆಗಳ ಸುಮಾರು 495 ಕೊಠಡಿಗಳನ್ನು ಗುರುತಿಸಲಾಗಿದೆ. ಆದರೆ ತಕ್ಷಣವೇ ಕ್ರಮವಹಿಸಬೇಕಾದ 62 ಶಾಲೆಗಳ 262 ಕೊಠಡಿಗಳನ್ನು ದುರಸ್ತಿಗೊಳಿಸಬೇಕಿದೆ. ಇದಕ್ಕೆ ತಗಲುವ ವೆಚ್ಚವನ್ನು ಜಿಲ್ಲಾ ಪಂಚಾಯತ ಹಾಗೂ ತಾಲೂಕು ಪಂಚಾಯತದ ಅನಿಭಂರ್ದಿತ ಅನುದಾನದಿಂದ ಪಡೆಯಲು ಪ್ರಸ್ತಾವನೆ ಸಲ್ಲಿಸಬೇಕೆಂದು ಅವರು ಹೇಳಿದರು. 

ಪ್ರತಿ ಶಾಲೆಗೆ ಅಗತ್ಯ ಶೌಚಾಲಯ, ಆಟದ ಮೈದಾನ, ಗ್ರಂಥಾಲಯ ಹಾಗೂ ಇತರ ಸೌಲಭ್ಯಗಳನ್ನು ಪಡೆಯಲು ಸೂಕ್ತ ಮತ್ತು ವಿವರವಾದ ಪ್ರಸ್ತಾವನೆಯನ್ನು ಸರಕಾರಕ್ಕೆ ಸಲ್ಲಿಸಲು ಸಿದ್ದತೆ ಮಾಡಿಕೊಳ್ಳಬೇಕೆಂದು ಅವರು ಹೇಳಿದರು.  

ವಿವಿಧ ಕಂಪನಿಗಳ ಸಿಎಸ್‌ಆರ್ ಅನುದಾನದಲ್ಲಿ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಗಳ ವ್ಯಾಪ್ತಿಯಲ್ಲಿ ಬರುವ ಶಾಲೆಗಳನ್ನು ಮಾದರಿ ಶಾಲೆಗಳಾಗಿ ರೂಪಿಸಲು ಸರಕಾರ ಸೂಚಿಸಿದೆ. ಈ ನಿಟ್ಟಿನಲ್ಲಿ ಸೂಕ್ತ ಕ್ರಮವಹಿಸಬೇಕೆಂದು ಅವರು ಅಧಿಕಾರಿಗಳಿಗೆ ಸೂಚಿಸಿದರು. 

ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಸ್‌.ಎಸ್‌.ಕೆಳದಿಮಠ ಅವರು ಮಾತನಾಡಿ, ಜಿಲ್ಲೆಯಲ್ಲಿ 217 ಕಿರಿಯ, 521 ಹಿರಿಯ ಮತ್ತು 112 ಪ್ರೌಢಶಾಲೆಗಳು ಸೇರಿ ಒಟ್ಟು 850 ಶಾಲೆಗಳಿವೆ. ಇವುಗಳ ಪೈಕಿ ಹಿಂದಿನ ವರ್ಷ 85 ಶಾಲೆಗಳ 286 ಕೊಠಡಿಗಳನ್ನು ರಿಪೇರಿ ಮಾಡಲಾಗಿದೆ. ಪ್ರಸಕ್ತ ವರ್ಷ 147 ಶಾಲೆಗಳ 495 ಕೊಠಡಿಗಳ ದುರಸ್ತಿಗೆ ಗುರುತಿಸಲಾಗಿದೆ. ಅಗತ್ಯ ಕ್ರಿಯಾಯೋಜನೆ, ಪ್ರಸ್ತಾವನೆಯನ್ನು ಸಲ್ಲಿಸಲಾಗುವುದು ಎಂದು ಅವರು ಹೇಳಿದರು. 

ಸಭೆಯಲ್ಲಿ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಬಿ.ಎಸ್‌.ಮೂಗನೂರಮಠ, ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳರ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ವಿಜಯಕುಮಾರ, ಪಂಚಾಯತ ರಾಜ್ ಇಂಜನೀಯರಿಂಗ್ ಇಲಾಖೆ ಕಾರ್ಯಪಾಲಕ ಅಭಿಯಂತರ ಆರ್‌.ಎಂ.ಸೋಪ್ಪಿಮಠ, ಕ್ರೇಡಿಲ್ ಇಇ ಸುಜಾತಾ ಕಾಳೆ, ನಿರ್ಮಿತಿ ಕೇಂದ್ರದ ಜಿಲ್ಲಾ ವ್ಯವಸ್ಥಾಪಕ ಶಿವಕುಮಾರ ಪಾಟೀಲ,  ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಉಮೇಶ ಬೊಮ್ಮಕ್ಕನವರ, ಅಶೋಕ ಸಿಂದಗಿ, ರಾಮಕೃಷ್ಣ ಸದಲಗಿ, ಶಿವಾನಂದ ಮಲ್ಲಾಡ, ಮಹಾದೇವಿ ಮಾಡಲಗಿ, ಉಮಾದೇವಿ ಬಸಾಪುರ ಸೇರಿದಂತೆ ಶಿಕ್ಷಣ ಇಲಾಖೆಯ ಇತರ ಅಧಿಕಾರಿಗಳು, ವಿವಿಧ ಇಲಾಖೆಗಳ ಸಹಾಯಕ ಕಾರ್ಯಪಾಲಕ ಅಭಿಯಂತರರು ಇತರರು ಇದ್ದರು.