ಬೀಜ-ಗೊಬ್ಬರ ಸಮರ್ಪಕ ಹಂಚಿಕೆಗೆ ಜಿಲ್ಲಾಧಿಕಾರಿ ಸೂಚನೆ

ಬೆಳಗಾವಿ, 08: ಮುಂಗಾರು ಹಂಗಾಮಿನಲ್ಲಿ ರೈತರಿಗೆ ಗುಣಮಟ್ಟದ ಬಿತ್ತನೆ ಬೀಜಗಳು ಹಾಗೂ ಅಗತ್ಯ ಗೊಬ್ಬರವನ್ನು ಸಮರ್ಪಕವಾಗಿ ಹಂಚಿಕೆ ಮಾಡಬೇಕು. ಒಂದು ವೇಳೆ ಇದಕ್ಕೆ ಸಂಬಂಧಿಸಿದಂತೆ ಏನಾದರೂ ದೂರುಗಳು ಬಂದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ವಿಶಾಲ್ ಆರ್. ಅವರು ಕೃಷಿ ಇಲಾಖೆಯ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಬೀಜ-ಗೊಬ್ಬರಗಳ ಲಭ್ಯತೆ, ಕೃಷಿ ವಿಮಾ ಯೋಜನೆ ಅನುಷ್ಠಾನ ಹಾಗೂ ಕೃಷಿ ಅಭಿಯಾನ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಬುಧವಾರ (ಮೇ 8) ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಳೆಯಾದ ನಂತರ ಬಿತ್ತನೆ ಬೀಜಗಳು ಮತ್ತು ಗೊಬ್ಬರಕ್ಕಾಗಿ ರೈತರಿಂದ ದಿಢೀರ್ ಬೇಡಿಕೆ ಬರುತ್ತದೆ. ಅಂತಹ ಸಂದರ್ಭದಲ್ಲಿ ಯಾವುದೇ ಅನಾನುಕೂಲ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು; ಮುಂಚಿತವಾಗಿಯೇ ಬೀಜ-ಗೊಬ್ಬರಗಳ ಸಮರ್ಪಕ ದಾಸ್ತಾನು ಮಾಡಿಕೊಳ್ಳಬೇಕು. ರೈತರಿಗೆ ಮಾಹಿತಿ ಒದಗಿಸಲು ಅಥವಾ ದೂರುಗಳನ್ನು ಸ್ವೀಕರಿಸಲು ಸಹಾಯವಾಣಿ ಕೇಂದ್ರ ಸ್ಥಾಪಿಸಬೇಕು ಎಂದು ತಿಳಿಸಿದರು.

ಬಿತ್ತನೆ ಬೀಜಗಳನ್ನು ವಿತರಿಸುವಾಗ ಗುಣಮಟ್ಟವನ್ನು ಖಾತ್ರಿಪಡಿಸಿಕೊಂಡೇ ರೈತರಿಗೆ ಪೂರೈಸಬೇಕು ಮತ್ತು  ಯಾವುದೇ ಕಾರಣಕ್ಕೂ ಕೊರತೆಯಾಗದಂತೆ ಕ್ರಮವಹಿಸಬೇಕು ಎಂದು ನಿದರ್ೇಶನ ನೀಡಿದರು.

ನೀರಿನ ಕೊರತೆಯಿಂದಾಗಿ ರೈತರು ಕಬ್ಬಿನ ಬದಲಾಗಿ ಪಯರ್ಾಯ ಬೆಳೆಯನ್ನು ಬೆಳೆಯಲು ಮುಂದಾದರೆ ಅಗತ್ಯವಾಗಿರುವ ಪಯರ್ಾಯ ಬೀಜಗಳನ್ನು ದಾಸ್ತಾನು ಮಾಡಿಕೊಳ್ಳಬೇಕು. ಭೂಮಿಯ ಫಲವತ್ತತೆ ಹೆಚ್ಚಿಸುವ ನಿಟ್ಟಿನಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಜಿಲ್ಲೆಯಲ್ಲಿ ಮಳೆ ಕೊರತೆ:

ಈ ಸಂದರ್ಭದಲ್ಲಿ ಮಾತನಾಡಿದ ಕೃಷಿ ಇಲಾಖೆಯ ಜಂಟಿ ನಿದರ್ೇಶಕ ಜಿಲಾನಿ ಮೊಖಾಶಿ ಅವರು, 'ಜಿಲ್ಲೆಯಲ್ಲಿ ಈ ಬಾರಿ ಶೇ.67 ರಷ್ಟು ಮಳೆಯ ಕೊರತೆ ಉಂಟಾಗಿದೆ. ಪ್ರಸಕ್ತ ಸಾಲಿನ ಜನವರಿ ತಿಂಗಳಿನಿಂದ ಇಲ್ಲಿಯವರೆಗೆ 48 ಮಿ.ಮೀ. ಮಳೆಯಾಗಬೇಕಿತ್ತು. ಆದರೆ ಇದುವರೆಗೆ ಕೇವಲ 16 ಮಿ.ಮೀ. ಮಳೆಯಾಗಿದೆ' ಎಂದು ಮಾಹಿತಿ ನೀಡಿದರು.

ಮುಂಗಾರು ಹಂಗಾಮಿಗಾಗಿ ಜಿಲ್ಲೆಗೆ ಅಗತ್ಯವಿರುವ ಬೀಜ-ಗೊಬ್ಬರಗಳ ಸಮರ್ಪಕ ದಾಸ್ತಾನು ಇರುತ್ತದೆ. ರೈತರ ಬೇಡಿಕೆಗೆ ಅನುಗುಣವಾಗಿ ಬೀಜ-ಗೊಬ್ಬರಗಳ ವಿತರಣೆಗೆ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ವಿವರಿಸಿದರು.

ರೈತರಿಗೆ ಅಗತ್ಯವಿರುವ ಬೀಜ-ಗೊಬ್ಬರಗಳನ್ನು ಸಮರ್ಪಕವಾಗಿ ಹಂಚಿಕೆ ಮಾಡಲು ಸಹಕಾರ ನೀಡಬೇಕು ಎಂದು ಬೀಜ-ಗೊಬ್ಬರ ಮಾರಾಟಗಾರರಿಗೂ ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಕೃಷಿ ಅಭಿಯಾನ: 

ಕೃಷಿ ಯೋಜನೆಗಳ ಬಗ್ಗೆ ಅರಿವು ಮೂಡಿಸಲು ಕೃಷಿ ಇಲಾಖೆಯ ನೇತೃತ್ವದಲ್ಲಿ ವಿವಿಧ ಇಲಾಖೆಗಳ ಸಹಯೋಗದಲ್ಲಿ "ಇಲಾಖೆಗಳ ನಡಿಗೆ ರೈತರ ಮನೆಬಾಗಿಲಿಗೆ" ಎಂಬ ಘೋಷಣೆಯೊಂದಿಗೆ ಮೇ ತಿಂಗಳಿನಲ್ಲಿ ಜಿಲ್ಲೆಯಾದ್ಯಂತ ಕೃಷಿ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದ್ದು, ಈ ಅಭಿಯಾನದ ಆಶಯದ ಪ್ರಕಾರ ಪ್ರತಿಯೊಬ್ಬ ರೈತರಿಗೂ ಮಾಹಿತಿ ಒದಗಿಸುವ ಕೆಲಸವಾಗಬೇಕು ಎಂದು ಜಿಲ್ಲಾಧಿಕಾರಿ ಡಾ.ವಿಶಾಲ್ ತಿಳಿಸಿದರು.

ಮೂರು ದಿನಗಳ ಕೃಷಿ ಅಭಿಯಾನದಲ್ಲಿ ಮೊದಲ ಎರಡು ದಿನಗಳಲ್ಲಿ ಪಂಚಾಯ್ತಿ ಮಟ್ಟದಲ್ಲಿ ಅರಿವು ಮೂಡಿಸಲಾಗುವುದು ಮೂರನೇ ದಿನ ಹೋಬಳಿ ಮಟ್ಟದಲ್ಲಿ ವೇದಿಕೆ ಕಾರ್ಯಕ್ರಮವನ್ನು ಏರ್ಪಡಿಸಲಾಗುತ್ತದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಬಿತ್ತನೆ ಬೀಜ, ಗೊಬ್ಬರ-ಕೀಟನಾಶಕಗಳನ್ನು ಖರೀದಿಸುವಾಗ ವಹಿಸಬೇಕಾದ ಮುನ್ನೆಚ್ಚರಿಕೆಗಳ ಬಗ್ಗೆ ಜಾಗೃತಿ ಮೂಡಿಸುವ ಪ್ರಚಾರಸಾಮಗ್ರಿಗಳನ್ನು ಜಿಲ್ಲಾಧಿಕಾರಿ ಡಾ.ವಿಶಾಲ್ ಆರ್. ಅವರು ಬಿಡುಗಡೆಗೊಳಿಸಿದರು.

ಕೃಷಿ ಇಲಾಖೆಯ ಜಂಟಿ ನಿದರ್ೇಶಕ ಜಿಲಾನಿ ಮೊಖಾಶಿ, ಉಪನಿದರ್ೇಶಕರಾದ ಡಾ.ಎಚ್.ಡಿ.ಕೋಳೇಕರ್, ತೋಟಗಾರಿಕೆ ಇಲಾಖೆಯ ಉಪನಿದರ್ೇಶಕರಾದ ಹಕಾಟಿ, ಕೃಷಿ, ಸಹಕಾರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.