ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ : ನ್ಯಾಯಾಧೀಶ ಹೆಚ್.ಎ.ಮೋಹನ್
ವಿಜಯಪುರ ಜೂನ್.05: ಪ್ಲಾಸ್ಟಿಕ್ ಮಾಲಿನ್ಯ ಕೊನೆಗೊಳಿಸುವ ಧ್ಯೇಯದೊಂದಿಗೆ ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ. ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ ಎಂದು ಒಂದನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಧೀಶ ಹೆಚ್.ಎ.ಮೋಹನ್ ಅವರು ಹೇಳಿದರು.
ಗುರುವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ನಗರದ ಅಫಜಲಪೂರ ಟಕ್ಕೆಯಲ್ಲಿರುವ ಅರಣ್ಯ ಇಲಾಖೆ ಕಚೇರಿ ಮುಂಭಾಗದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, “ಪ್ಲಾಸ್ಟಿಕ್ ಮಾಲಿನ್ಯವನ್ನು ಕೊನೆಗೊಳಿಸುವುದು" ವಿಶ್ವ ಪರಿಸರ ದಿನದ ಪ್ರಮುಖ ಧ್ಯೇಯವಾಗಿದೆ. ಅಭಿಯಾನದ ಹ್ಯಾಶ್ ಟ್ಯಾಗ್ "ಪ್ಲಾಸ್ಟಿಕ್ ಮಾಲಿನ್ಯವನ್ನು ಸೋಲಿಸಿ, ವಿಶ್ವ ಪರಿಸರ ದಿನವು ಪ್ಲಾಸ್ಟಿಕ್ ಮಾಲಿನ್ಯದ ಪರಿಣಾಮಗಳನ್ನು ಎತ್ತಿ ತೊರಿಸುವುದು ಮತ್ತು ಪರಿಹಾರಗಳನ್ನು ಕಾರ್ಯಗತಗೊಳಿಸಲು ಸಮುದಾಯಗಳನ್ನು ಸಜ್ಜುಗೊಳಿಸುವುದರ ಮೇಲೆ ಕೇಂದ್ರಕರಿಸುತ್ತದೆ. ಪರಿಸರ ಸಂರಕ್ಷಣೆ ಒಂದು ಮೂಲಭೂತ ಕರ್ತವ್ಯವಾಗಿದ್ದು, ಪರಿಸರವನ್ನು ರಕ್ಷಿಸುವ ಕಡೆಗೆ ಕ್ರಮ ಕೈಗೊಳ್ಳಲು ಸಮುದಾಯಗಳನ್ನು ಪ್ರೋತ್ಸಾಹಿಸುವ ಗುರಿಯನ್ನು ಹೊಂದಿದೆ ಎಂದು ಹೇಳಿದರು.
ವಿಶ್ವ ಪರಿಸರ ದಿನದ ಅಂಗವಾಗಿ ಸರ್ಕಾರಿ ಜಮೀನುಗಳು, ಶಾಲೆಗಳು, ಕಾಲೇಜುಗಳು, ಮತ್ತು ಸರ್ಕಾರಿ ಕಛೇರಿಗಳ ಆವರಣ ಮುಂತಾದ ಸಾರ್ವಜನಿಕ ಸ್ಥಳಗಳಲ್ಲಿ ಓಷಧೀಯ ಸಸ್ಯಗಳು ಸೇರಿದಂತೆ ಸಸಿಗಳನ್ನು ವಿಜಯಪೂರ ಜಿಲ್ಲೆಯ ಪ್ರತಿ ತಾಲ್ಲೂಕಿನಲ್ಲಿ 10,000 ಕ್ಕೂ ಹೆಚ್ಚು ಸಸಿಗಳನ್ನು ನೆಡಲಾಗುತ್ತಿದೆ. ಇಂದು ನಗರದ ಅಫಜಲಫುರ ಟಕ್ಕೆಯಲ್ಲಿ ಸುಮಾರು 1200 ಸಸಿಗಳನ್ನು ನೆಡಲಾಗುತ್ತಿದ್ದು, ಉಳಿದ ಸಸಿಗಳನ್ನು ಹಂತ-ಹಂತವಾಗಿ ಜಿಲ್ಲೆಯ ಎಲ್ಲ ತಾಲೂಕಿನ ವ್ಯಾಪ್ತಿಗಳಲ್ಲಿ ನೆಡಲಾಗುವುದು ಎಂದು ಅವರು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ವಹಿಸಿದ್ದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹಿರಿಯ ಸಿವಿಲ್ ನ್ಯಾಯಾಧೀಶ ಅರವಿಂದ ಎಸ್.ಹಾಗರಗಿ, ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷರಾದ ಡಿ.ಜಿ.ಬಿರಾದಾರ, ಕಾರ್ಯದರ್ಶಿ ಸುರೇಶ ಚೂರಿ, ಅರಣ್ಯಾಧಿಕಾರಿಗಳಾದ ಶಿವಶರಣಯ್ಯ ಬಿ.ಕೆ., ಶ್ರೀಮತಿ ವನಿತಾ ಆರ್. ಸೇರಿದಂತೆ ಜಿಲ್ಲೆಯ ವಿವಿಧ ಕಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರುಗಳು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಿಬ್ಬಂದಿಗಳು ಉಪಸ್ಥಿತರಿದ್ದರು.