ರಸ್ತೆಯ ಆಯ್ದ ಭಾಗಗಳಲ್ಲಿ 60 ಲಕ್ಷ ರೂ. ವೆಚ್ಚದಲ್ಲಿ ನವೀಕರಣ ಕಾಮಗಾರಿಗೆ ಶಾಸಕ ಶ್ರೀನಿವಾಸ ಮಾನೆ ಭೂಮಿಪೂಜೆ
ಹಾನಗಲ್ 12 :ತಾಲೂಕಿನ ಸಮ್ಮಸಗಿ ಕ್ರಾಸ್ ಬಳಿ ಲೋಕೋಪಯೋಗಿ ಇಲಾಖೆಯಿಂದ ಹರಿಹರ -ಸಮ್ಮಸಗಿ ರಸ್ತೆಯಿಂದ ಎಕ್ಕಂಬಿ-ಮೊಣಕಾಲ್ಮೂರು ರಸ್ತೆ ವಾಯಾ ನೀರಲಗಿ ರಸ್ತೆಯ ಆಯ್ದ ಭಾಗಗಳಲ್ಲಿ 60 ಲಕ್ಷ ರೂ. ವೆಚ್ಚದಲ್ಲಿ ನವೀಕರಣ ಕಾಮಗಾರಿಗೆ ಶಾಸಕ ಶ್ರೀನಿವಾಸ ಮಾನೆ ಭೂಮಿಪೂಜೆ ನೆರವೇರಿಸಿದರು.
ತಾಲೂಕಿನ ಕೆಲವು ಗ್ರಾಮೀಣ ಪ್ರದೇಶಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಹದಗೆಟ್ಟು ಹೋಗಿದ್ದು ಸಂಚಾರಕ್ಕೆ ಅಡೆತಡೆ ಉಂಟಾಗಿದೆ. ಅಂಥ ರಸ್ತೆಗಳನ್ನು ಆದ್ಯತೆ ಮತ್ತು ಅನುದಾನ ಲಭ್ಯತೆ ಆಧರಿಸಿ ಅಭಿವೃದ್ಧಿ ಪಡಿಸಲಾಗುತ್ತಿದೆ. ತಾಂತ್ರಿಕ ಕಾರಣಗಳಿಂದ ಕೆಲ ರಸ್ತೆಗಳನ್ನು ಅಭಿವೃದ್ಧಿ ಪಡಿಸುವುದು ನಿಧಾನವಾಗುತ್ತಿದ್ದು, ತಾಂತ್ರಿಕ ಕಾರಣ, ಕಾನೂನು ಸಮಸ್ಯೆಗಳನ್ನು ಪರಿಹರಿಸಿಕೊಂಡು ರಸ್ತೆ ಅಭಿವೃದ್ಧಿಗೆ ಚಾಲನೆ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ತಾಲೂಕಿನಲ್ಲಿ ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಸಮಸ್ಯೆಗಳ ಪರಿಹಾರಕ್ಕೆ ಗಮನ ನೀಡಲಾಗಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಈ ಸಂದರ್ಭದಲ್ಲಿ ತಿಳಿಸಿದರು.
ತಾಪಂ ಮಾಜಿ ಅಧ್ಯಕ್ಷ ಸಿದ್ದನಗೌಡ ಪಾಟೀಲ, ತಾಪಂ ಕೆಡಿಪಿ ಸದಸ್ಯ ರಾಜೂ ಜೋಗಪ್ಪನವರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತಪ್ಪ ಮರಗಡಿ, ಚಿಕ್ಕಾಂಶಿ ಹೊಸೂರು ಗ್ರಾಪಂ ಅಧ್ಯಕ್ಷ ವೀರಭದ್ರಗೌಡ ಪಾಟೀಲ, ಲೋಕೋಪಯೋಗಿ ಇಲಾಖೆಯ ಎಇಇ ನಾಗರಾಜ, ಮುಖಂಡರಾದ ಮಾಲತೇಶ ಈಳಿಗೇರ, ಮಲ್ಲೇಶಣ್ಣ ದೊಡ್ಡಮನಿ, ವಿನಾಯಕ ಕಮಾಟಿ, ವಿಶ್ವನಾಥ ದೊಡ್ಡಮನಿ, ಗಣಪತೆಪ್ಪ ಜಾಡರ, ಪರಸಣ್ಣ ಈಳಿಗೇರ, ಶೇಕಣ್ಣ ಈಳಿಗೇರ, ಹನುಮಂತಪ್ಪ ಗುಡ್ಡೇರ, ರಾಜೂ ಗಾಡಗೇರ ಸೇರಿದಂತೆ ಗ್ರಾಪಂ ಸದಸ್ಯರು, ಹಲವು ಮುಖಂಡರು ಉಪಸ್ಥಿತರಿದ್ದರು.