ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹೊಸ ಹಾಸ್ಟೆಲ್ಗಳಿಗೆ ಎಸ್‌ಎಫ್‌ಐ ಆಗ್ರಹ

ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹೊಸ ಹಾಸ್ಟೆಲ್ಗಳಿಗೆ ಎಸ್‌ಎಫ್‌ಐ ಆಗ್ರಹ  SFI demands new hostels according to the number of students

ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ; ಎಲ್ಲಾ ಅರ್ಹ ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯ ಕಲ್ಪಿಸಲು ಮನವಿ  

ಹಾವೇರಿ, ಜು.24: ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹೊಸ ಹಾಸ್ಟೆಲ್ಗಳನ್ನು ಮಂಜೂರು ಮಾಡಬೇಕು ಹಾಗೂ ಅರ್ಜಿ ಸಲ್ಲಿಸಿದ ಎಲ್ಲ ಅರ್ಹ ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ಹಾವೇರಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.  

ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ ಹಾಗೂ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಡಾ. ಪುನೀತ್ ಅವರಿಗೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು, ಗ್ರಾಮೀಣ ಭಾಗದ ಸಾವಿರಾರು ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕಾಗಿ ಹಾವೇರಿಗೆ ಬರುತ್ತಿದ್ದು, ಹಾಸ್ಟೆಲ್ಗಳ ಕೊರತೆಯಿಂದ ಶಿಕ್ಷಣ ಮುಂದುವರಿಸಲು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ತಿಳಿಸಿದರು.  

ಎಸ್‌ಎಫ್‌ಐ ಜಿಲ್ಲಾ ಅಧ್ಯಕ್ಷ ಬಸವರಾಜ ಎಸ್‌. ಮಾತನಾಡಿ, ಹಾಸ್ಟೆಲ್ಗಳಿಗೆ ಸಾವಿರಾರು ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದರೂ, ಅತಿ ಕಡಿಮೆ ಮಂದಿಗೆ ಮಾತ್ರ ಪ್ರವೇಶ ದೊರೆಯುತ್ತಿದೆ. ವಸತಿ ಸೌಲಭ್ಯ ಸಿಗದ ಕಾರಣ ಅನೇಕ ವಿದ್ಯಾರ್ಥಿಗಳು ಶಿಕ್ಷಣವನ್ನು ಮಧ್ಯದಲ್ಲೇ ತೊರೆಯುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು.  

ಇದಲ್ಲದೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕೌನ್ಸೆಲಿಂಗ್ ಪದ್ಧತಿಯಲ್ಲಿನ ಹಾಸ್ಟೆಲ್ ಪ್ರವೇಶ ವ್ಯವಸ್ಥೆಯಿಂದ ಅನೇಕ ವಿದ್ಯಾರ್ಥಿಗಳು ವಂಚಿತರಾಗುತ್ತಿದ್ದಾರೆ. ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆಗೆ ತಕ್ಕಷ್ಟು ಸರ್ಕಾರಿ ಹಾಸ್ಟೆಲ್ಗಳಿಲ್ಲ. ಇರುವ ಹಾಸ್ಟೆಲ್ಗಳಲ್ಲಿಯೂ ಮೂಲಭೂತ ಸೌಲಭ್ಯಗಳ ಕೊರತೆ ಇದೆ ಎಂದು ದೂರಿದರು.  

ಎಸ್‌ಎಫ್‌ಐ ರಾಜ್ಯ ಹಾಸ್ಟೆಲ್ ಸಂಚಾಲಕ ಅರುಣ್ ಕುಮಾರ್ ನಾಗವತ್ ಮಾತನಾಡಿ, ಸಮಾಜ ಕಲ್ಯಾಣ ಇಲಾಖೆಯ ಮಾದರಿಯಲ್ಲಿ ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿದ್ಯಾರ್ಥಿಗಳಿಗೂ ಸಮರ​‍್ಕ ಹಾಸ್ಟೆಲ್ ಸೌಲಭ್ಯ ಒದಗಿಸಬೇಕು. ಇಲ್ಲವಾದರೆ ವಿದ್ಯಾರ್ಥಿಗಳಿಗಾಗಿ ಮೀಸಲಿರುವ ಯೋಜನೆಗಳ ಅನುದಾನವನ್ನು ವಸತಿ ಸೌಲಭ್ಯ ವಿಸ್ತರಣೆಗೆ ಬಳಸಬೇಕು ಎಂದು ಆಗ್ರಹಿಸಿದರು.  

ಅಧಿಕಾರಿಗಳ ಭರವಸೆ  

ಮನವಿ ಸ್ವೀಕರಿಸಿದ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಡಾ. ಪುನೀತ್ ಮಾತನಾಡಿ, ಹಾಸ್ಟೆಲ್ಗಳ ಸಂಖ್ಯೆಯ ಕೊರತೆಯಿಂದ ಎಲ್ಲ ವಿದ್ಯಾರ್ಥಿಗಳಿಗೆ ತಕ್ಷಣವೇ ವಸತಿ ಕಲ್ಪಿಸುವುದು ಸಾಧ್ಯವಾಗುತ್ತಿಲ್ಲ. ಹೊಸ ಹಾಸ್ಟೆಲ್ಗಳ ಮಂಜೂರಾತಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಸ್ಥಳೀಯ ಮಟ್ಟದಲ್ಲಿಯೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆ ಪರಿಹರಿಸಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.  

ಈ ವೇಳೆ ಅಧಿಕಾರಿಗಳು ವಿದ್ಯಾರ್ಥಿಗಳೊಂದಿಗೆ ಚರ್ಚಿಸಿ ಸೋಮವಾರದೊಳಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಬೇಡಿಕೆ ಈಡೇರದಿದ್ದರೆ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ನಡೆಸುವುದಾಗಿ ಎಸ್‌ಎಫ್‌ಐ ಎಚ್ಚರಿಕೆ ನೀಡಿತು. ಪ್ರತಿಭಟನೆಯಲ್ಲಿ ಎಸ್‌ಎಫ್‌ಐ ಮುಖಂಡರಾದ ದ್ಯಾಮಣ್ಣ ಎಸ್‌., ಶೋಭಾ ದೇವರಮನಿ, ಕಲ್ಪನಾ ಬಡಿಗೇರಿ, ಲಕ್ಷ್ಮೀ ರೆಡ್ಡಿಗೌಡರ, ಮಹಾದೇವಿ ಪೂಜಾರ, ರೇಖಾ ಹರವಿ, ಸಪ್ನಾ ಮನೋಜ್, ಪ್ರಿಯಾ ಟಿ., ಅರ್ಚನಾ ಹಡಪದ, ನಿಕಿತಾ ಸಾವಕ್ಕನವರ್, ಲಲಿತಾ ಮೆಕ್ಕಿ, ಜಯಲಕ್ಷ್ಮೀ ಪಾಟೀಲ್ ಸೇರಿದಂತೆ ಅನೇಕ ವಿದ್ಯಾರ್ಥಿಗಳು ಭಾಗವಹಿಸಿದ್ದರು.