ಕಾರವಾರ 27: ಉತ್ತರ ಕನ್ನಡ ಜಿಲ್ಲೆಯ ಸಮಗ್ರ ಆಭಿವೃದ್ಧಿಗಾಗಿ ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯ ಜಿಲ್ಲಾ ಮಟ್ಟದ ಸಂವಾದ ಸಭೆಯಲ್ಲಿ ಸಲಹೆಗಳ ಮಹಾಪೂರವೇ ಹರಿದು ಬಂದಿತು.ಸಭೆಯಲ್ಲಿ ಉಪಸ್ಥಿತರಿದ್ದ ಎಲ್ಲಾ ಅಧಿಕಾರಿಗಳು ಪ್ರಮುಖವಾಗಿ ತಮ್ಮ ಇಲಾಖೆಗಳಲ್ಲಿ ಸಿಬ್ಬಂದಿಗಳ ಕೊರತೆಯನ್ನೇ ಪ್ರಮುಖವಾಗಿ ಪ್ರಸ್ತಾಪಿಸಿದರು. ಜಿಲ್ಲೆಯ ಹಲವು ತಾಲೂಕುಗಳಿಗೆ ಯಾವುದೇ ಅಧಿಕಾರಿಗಳು, ಸಿಬ್ಬಂದಿಗಳು, ವೈದ್ಯರು ವರ್ಗಾವಣೆಯಾದರೂ ಬರುವುದಿಲ್ಲ. ಜೊಯಿಡಾ, ಮುಂಡಗೋಡ ತಾಲೂಕುಗಳಿಗೆ ನೇಮಕವಾಗುವ ಶಿಕ್ಷಕರಿಗೆ ಹಾಗೂ ವಿವಿಧ ಸರ್ಕಾರಿ ಇಲಾಖೆಯ ಅಧಿಕಾರಿಗಳಿಗೆ, ಸಿಬ್ಬಂದಿಗೆ ವಿಶೇಷ ಭತ್ಯೆ ನೀಡಬೇಕು ಎಂಬ ಸಲಹೆ ವ್ಯಕ್ತವಾಯಿತು. ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಶಿಕ್ಷಕ ಹುದ್ದೆಗೆ ಬದಲಾಗಿ ನೇಮಕವಾಗುವ ಅತಿಥಿ ಶಿಕ್ಷಕರಿಗೆ ಸೂಕ್ತ ತರಬೇತಿ ನೀಡಬೇಕು, ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಾಗಬೇಕು ಎಂಬ ಅಭಿಪ್ರಾಯ ವ್ಯಕ್ತವಾಯಿತು.
ಸಭೆಯಲ್ಲಿದ್ದ ಪ್ರವಾಸೋದ್ಯಮ ಅಧಿಕಾರಿಯಿಂದ ಗೋವಾ ಮಾದರಿಯಲ್ಲಿ ಪ್ರವಾಸೋದ್ಯಮ ಅಭಿವೃದ್ದಿಪಡಿಸಬೇಕು ಎಂದರು. ಕೈಗಾರಿಕೆಗಳಿಗೆ ನಿರಂತರ ವಿದ್ಯುತ್ ಪೂರೈಕೆ ಆಗಬೇಕು, ಮೊಬೈಲ್ ನೆಟ್ವರ್ಕ ಸಮಸ್ಯೆಗಳನ್ನು ಸರಿಪಡಿಸಬೇಕು ಎಂಬ ಸಲಹೆಗಳು ವ್ಯಕ್ತವಾದವು. ಅಭಿವೃದ್ಧಿ ಯೋಜನೆಗಳಿಗೆ ಸಂಬಂಧಿಸಿ, ಪಕ್ಕದ ಸಣ್ಣ ಜಿಲ್ಲೆಗಳಿಗೆ ಹೋಲಿಕೆಯಾದಲ್ಲಿ, ನಮ್ಮ ಜಿಲ್ಲೆಯು ಅದಕ್ಕಿಂತ ದೊಡ್ಡ ಜಿಲ್ಲೆಯಾದರೂ ಅನುದಾನ ಹಂಚಿಕೆಯಲ್ಲಿ ವ್ಯತ್ಯಾಸವಾಗುತ್ತಿದೆ, 8 ನೇ ತರಗತಿ ನಂತರ ಶಾಲೆಗಳಲ್ಲಿ ಕಡ್ಡಾಯವಾಗಿ ಕೌಶಲ್ಯ ಶಿಕ್ಷಣ ಅಳವಡಿಸಬೇಕು, ಜಿಲ್ಲೆಯು ಕರಾವಳಿ, ಪಶ್ಚಿಮ ಘಟ್ಟ, ಬಯಲು ಸೀಮೆ, ಮಲೆನಾಡು ಪ್ರದೇಶವನ್ನು ಹೊಂದಿದ್ದು, ಜಿಲ್ಲೆಗೆ ಸಂಬಂಧಿಸಿದಂತೆ ಪೀಪಲ್ ಪ್ಲಾನ್ ರೂಪಿಸಿ, ಇದಕ್ಕಾಗಿ ಪ್ರತ್ಯೇಕ ಅನುದಾನ ನೀಡಬೇಕು, ಎಂಡೋ ಸಲ್ಫಾನ್ ಪೀಡಿತರಿಗೆ ಸೂಕ್ತ ನೆರವು ದೊರೆಯಬೇಕು ಎಂದು ಸ್ಕೂಡವೇಸ್ ಸಂಸ್ಥೆಯ ಡಾ.ವೆಂಕಟೇಶ್ ನಾಯಕ್ ಪ್ರಸ್ತಾಪಿಸಿದರು.
ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯು ಅತ್ಯಂತ ಪರಿಣಾಮಕಾರಿಯಾದ ವರದಿ ಸಲ್ಲಿಕೆಗೆ ಅಧಿಕಾರಿಗಳು, ಸಂಘ ಸಂಸ್ಥೆಗಳು, ಸಾರ್ವಜನಿಕರು ನಿಡುವ ಸಲಹೆಗಳು ಅತ್ಯಂತ ಪ್ರಮುಖವಾಗಿದ್ದು, ಈ ಎಲ್ಲಾ ಸಲಹೆಗಳನ್ನು ಕ್ರೂಢೀಕರಿಸಿ ಉತ್ತಮ ವರದಿಯನ್ನು ಸಲ್ಲಿಸಲಾಗುವುದು ಎಂದು ಸಮಿತಿಯ ಸದಸ್ಯ ಡಾ.ಎಸ್.ಟಿ. ಬಾಗಲಕೋಟಿ ಹೇಳಿದರು. ಸಭೆಯಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕಾಂದೂ, ಡಿ.ಎಫ್.ಓ. ರವಿಶಂಕರ್, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.