ಚರಂಡಿ ನೀರಿನಿಂದ ಕೃಷಿ ಭೂಮಿ ಹಾನಿ: ಶಾಶ್ವತ ಪರಿಹಾರಕ್ಕೆ ರೈತರ ಆಗ್ರಹ

ಚರಂಡಿ ನೀರಿನಿಂದ ಕೃಷಿ ಭೂಮಿ ಹಾನಿ: ಶಾಶ್ವತ ಪರಿಹಾರಕ್ಕೆ ರೈತರ ಆಗ್ರಹ  Agricultural land damaged by sewage water: Farmers demand permanent solution

ಲಕ್ಷ್ಮೇಶ್ವರ 20:  ನಗರದ ಚರಂಡಿ ನೀರು ಲಂಡಿಹಳ್ಳದ ಮೂಲಕ ಹರಿದು ಅಡರಕಟ್ಟಿ ಹಾಗೂ ಮಂಜಲಾಪುರ ಗ್ರಾಮದ ರೈತರ ಫಲವತ್ತಾದ ಕೃಷಿ ಭೂಮಿಗೆ ನುಗ್ಗುತ್ತಿರುವುದರಿಂದ ಸುಮಾರು 150 ಎಕರೆ ಕೃಷಿ ಭೂಮಿಯಲ್ಲಿ ಉಳುಮೆ ಮಾಡಲು ತೀವ್ರ ತೊಂದರೆಯಾಗಿದ್ದು, 300ಕ್ಕೂ ಹೆಚ್ಚು ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ.  ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಅಡರಕಟ್ಟಿ ಹಾಗೂ ಮಂಜಲಾಪುರ ಗ್ರಾಮದ ರೈತರು ಸೋಮವಾರ ಲಕ್ಷ್ಮೇಶ್ವರ ಪುರಸಭೆ ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.  

ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ರೈತ ಮುಖಂಡ ಹಾಗೂ ವಕೀಲ ರವಿಕಾಂತ ಅಂಗಡಿ, “ಲಕ್ಷ್ಮೇಶ್ವರ ನಗರದ ಚರಂಡಿ ನೀರು ಲಂಡಿಹಳ್ಳದ ಮೂಲಕ ಹರಿದು ರೈತರ ಫಲವತ್ತಾದ ಕೃಷಿ ಭೂಮಿಗೆ ನುಗ್ಗುತ್ತಿರುವುದು ಗಂಭೀರ ಸಮಸ್ಯೆಯಾಗಿದೆ. ಇದರಿಂದ ಸುಮಾರು 150 ಎಕರೆ ಕೃಷಿ ಭೂಮಿಯಲ್ಲಿ ಕೃಷಿ ಚಟುವಟಿಕೆ ನಡೆಸಲು ಸಾಧ್ಯವಾಗುತ್ತಿಲ್ಲ. 300ಕ್ಕೂ ಹೆಚ್ಚು ರೈತರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ” ಎಂದು ಹೇಳಿದರು.  

“ರೈತರ ಜೀವನಾಧಾರವಾಗಿರುವ ಕೃಷಿ ಭೂಮಿಯನ್ನು ಕಲುಷಿತಗೊಳಿಸುತ್ತಿರುವ ಈ ಸಮಸ್ಯೆಯನ್ನು ಜಿಲ್ಲಾಡಳಿತ ಹಾಗೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ತುರ್ತಾಗಿ ಪರೀಶೀಲಿಸಿ ಶಾಶ್ವತ ಪರಿಹಾರ ಒದಗಿಸಬೇಕು” ಎಂದು ಅವರು ಒತ್ತಾಯಿಸಿದರು.  

ಒಂದು ವಾರದೊಳಗೆ ಜಿಲ್ಲಾಧಿಕಾರಿಗಳು, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ರೈತರೊಂದಿಗೆ ಸಭೆ ನಡೆಸಿ ಸಮಸ್ಯೆಗೆ ಸೂಕ್ತ ಪರಿಹಾರ ಕಂಡುಕೊಳ್ಳಬೇಕು. ಇಲ್ಲವಾದಲ್ಲಿ ಅಡರಕಟ್ಟಿ ಗ್ರಾಮದಿಂದ ಗದಗ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ನಡೆಸಿ, ರೈತರೆಲ್ಲರೂ ಸೇರಿ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಹಾಕುವ ಮೂಲಕ ಉಗ್ರ ಹೋರಾಟ ನಡೆಸಲಾಗುವುದು ಎಂದು ರೈತರು ಎಚ್ಚರಿಕೆ ನೀಡಿದರು.  

ರೈತರ ಹಕ್ಕು ಹಾಗೂ ಕೃಷಿ ಭೂಮಿಯ ರಕ್ಷಣೆಗೆ ಹೋರಾಟ ಮುಂದುವರಿಯಲಿದೆ ಎಂದು ಅವರು ತಿಳಿಸಿದರು.  ಈ ಸಂದರ್ಭದಲ್ಲಿ ರೈತ ಮುಖಂಡರಾದ ಮಂಜುನಾಥ್ ಮಾಗಡಿ, ಬಿ.ಟಿ. ಚಂದ್ರಶೇಖರ್, ಬಸವರಾಜ ಹಿರೇಮನಿ, ಮುತ್ತಣ್ಣ ಗಡೇಪ್ಪನವರ, ಸಿದ್ದಣ್ಣ ಹವಳದ, ನಿಂಗಪ್ಪ ಪಾಟೀಲ್, ಚನ್ನಬಸಪ್ಪ ಹಳೇಮನಿ, ರಾಮಣ್ಣ ಚಿಕ್ಕಣ್ಣವರ, ಗಂಗನಗೌಡ ಪಾಟೀಲ್, ಮಾಂತೇಶ್ ಹವಳದ, ಯಲ್ಲಪ್ಪ ರೊಳ್ಳಿ ಸೇರಿದಂತೆ ಅಡರಕಟ್ಟಿ ಹಾಗೂ ಮಂಜಲಾಪುರ ಗ್ರಾಮದ ರೈತರು ಉಪಸ್ಥಿತರಿದ್ದರು.