ಕೃತಕ ಬುದ್ಧಿಮತ್ತೆ ಮತ್ತು ತಂತ್ರಜ್ಞಾನಗಳಿಂದ ವಿದ್ಯಾರ್ಥಿಗಳಲ್ಲಿ ನೈತಿಕತೆ, ಪ್ರಾಮಾಣಿಕತೆ ಬೆಳೆಸಲು ಸಾಧ್ಯವಿಲ್ಲ: ನ್ಯಾಯಾಧೀಶ ಸಿದ್ದಲಿಂಗ ಪ್ರಭು

ಕೃತಕ ಬುದ್ಧಿಮತ್ತೆ ಮತ್ತು ತಂತ್ರಜ್ಞಾನಗಳಿಂದ ವಿದ್ಯಾರ್ಥಿಗಳಲ್ಲಿ ನೈತಿಕತೆ, ಪ್ರಾಮಾಣಿಕತೆ ಬೆಳೆಸಲು ಸಾಧ್ಯವಿಲ್ಲ: ನ್ಯಾಯಾಧೀಶ ಸಿದ್ದಲಿಂಗ ಪ್ರಭು Artificial intelligence and technology cannot foster ethics and honesty among students: Judge Siddal

ಲೋಕದರ್ಶನ ವರದಿ

 ಬಳ್ಳಾರಿ 28:  ಕೃತಕ ಬುದ್ಧಿಮತ್ತೆ ಅಥವಾ ಯಾವುದೇ ತಂತ್ರಜ್ಞಾನಗಳು ವಿದ್ಯಾರ್ಥಿಗಳಲ್ಲಿ ಪ್ರಾಮಾಣಿಕತೆ, ನೈತಿಕತೆ ಮತ್ತು ಸಹಾನುಭೂತಿಯ ಶಿಕ್ಷಣವನ್ನು ಒದಗಿಸಲು ಸಾಧ್ಯವಿಲ್ಲ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಸಿದ್ದಲಿಂಗ ಪ್ರಭು ಹೇಳಿದರು.  ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ 17ನೇ ಸಂಸ್ಥಾಪನಾ ದಿನಾಚರಣೆಯನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.  

ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳಿಗೆ ಕೇವಲ ಶಿಕ್ಷಣ ನೀಡುವುದಷ್ಟೇ ಅಲ್ಲದೆ, ಮಾನವೀಯ ಮೌಲ್ಯಗಳು ಮತ್ತು ಸಂಸ್ಕಾರದ ಪರಂಪರೆಯ ಬಗ್ಗೆ ಜ್ಞಾನವನ್ನು ನೀಡಬೇಕು. ವಿದ್ಯಾರ್ಥಿಗಳು ಸಾಮಾಜಿಕ ಪರಂಪರೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಹೊಂದಿರಬೇಕು. ಸದಾ ಕಲಿಕೆಯ ಆಸಕ್ತಿಯನ್ನು ಹೊಂದಿರಬೇಕು ಎಂದು ಅವರು ತಿಳಿಸಿದರು.  

ಯುವಕರಲ್ಲಿ ಮಾನವೀಯ ಮೌಲ್ಯಗಳ ಕೊರತೆಯಿಂದ ಜಿಲ್ಲೆಯಲ್ಲಿ ಸೈಬರ್ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ. ವಿಶ್ವವಿದ್ಯಾಲಯಗಳು ಮೌಲ್ಯಾಧಾರಿತ ಶಿಕ್ಷಣ ನೀಡಲು ಹೆಚ್ಚಿನ ಪ್ರಯತ್ನ ಮಾಡಬೇಕು ಎಂದು ಅವರು ಹೇಳಿದರು.  

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಗುಲ್ಬರ್ಗಾ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಎಂ. ಮುನಿಯಮ್ಮ ಮಾತನಾಡಿ, ಸಂಶೋಧನಾ ವಿದ್ಯಾರ್ಥಿಗಳು ಯಾವುದೇ ಫೆಲೋಶಿಪ್ಗಾಗಿ ಕಾಯದೆ ತಮ್ಮ ಸಂಶೋಧನಾ ಲೇಖನಗಳನ್ನು ಅಂತಾರಾಷ್ಟ್ರೀಯ ಮಟ್ಟದ ಜರ್ನಲ್ಗಳಲ್ಲಿ ಪ್ರಕಟಿಸಲು ಶ್ರಮಿಸಬೇಕು ಎಂದು ಸಲಹೆ ನೀಡಿದರು.  

ಯಶಸ್ಸಿಗೆ ಸುಲಭ ಮಾರ್ಗ ಹುಡುಕದೆ ಕಠಿಣ ಪರಿಶ್ರಮದ ಮೂಲಕ ಉತ್ತಮ ಸಂಶೋಧನೆಯಲ್ಲಿ ತೊಡಗಿಸಿಕೊಳ್ಳಬೇಕು. ಬೋಧಕರು ಪಾಠ ಮಾಡುವ ಮೊದಲು ಉತ್ತಮವಾಗಿ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಹೇಳಿದರು.  

ಬೆಂಗಳೂರು ವಿಶ್ವವಿದ್ಯಾಲಯದ ಮಾಜಿ ಕುಲಸಚಿವ ಪ್ರೊ. ಕೆ. ಸೀತಮ್ಮ ಮಾತನಾಡಿ, ಸಮಾಜದಲ್ಲಿ ಸಮಾನತೆ ಸಾಧಿಸುವಲ್ಲಿ ಶಿಕ್ಷಣ ಕ್ಷೇತ್ರದ ಪಾತ್ರ ಮಹತ್ವದ್ದಾಗಿದೆ. ದೇಶದ ಆರ್ಥಿಕ ಪ್ರಗತಿಗೆ ಶಿಕ್ಷಣ ಪ್ರಮುಖ ಅಂಶವಾಗಿದೆ. ಉನ್ನತ ಶಿಕ್ಷಣದಲ್ಲಿ ಮಹಿಳಾ ಶಿಕ್ಷಣದ ಪ್ರಮಾಣ ಹೆಚ್ಚಾದರೂ, ವಿಶ್ವದ ಒಟ್ಟು ಶಿಕ್ಷಣ ಪಡೆದವರ ಪ್ರಮಾಣದಲ್ಲಿ ಭಾರತ ಇನ್ನೂ ಹೆಚ್ಚಿನ ಪ್ರಗತಿ ಸಾಧಿಸಬೇಕಿದೆ ಎಂದು ಹೇಳಿದರು.