13 ತಾಲೂಕುಗಳನ್ನೂ ಬರಪೀಡಿತವೆಂದು ಘೋಷಿಸಲು ಆಗ್ರಹ

13 ತಾಲೂಕುಗಳನ್ನೂ ಬರಪೀಡಿತವೆಂದು ಘೋಷಿಸಲು ಆಗ್ರಹ  Demand to declare 13 taluks drought-hit


ವಿಜಯಪುರ ಸೆ. 6: 2026-27ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಮಳೆ ಸಂಪೂರ್ಣ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯ ಎಲ್ಲ 13 ತಾಲೂಕುಗಳನ್ನು ತಕ್ಷಣ ಬರಪೀಡಿತ ತಾಲೂಕುಗಳೆಂದು ಘೋಷಿಸಿ ಪರಿಹಾರ ನೀಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಆಗ್ರಹಿಸಿದೆ. ಈ ಬೇಡಿಕೆಗೆ ಒತ್ತಾಯಿಸಿ ಸಂಘಟನೆಗಳ ನೇತೃತ್ವದಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಹೋರಾಟ ಐದನೇ ದಿನಕ್ಕೆ ಕಾಲಿಟ್ಟಿದೆ. ಮಾತನಾಡಿದ ಬಸವನಬಾಗೇವಾಡಿ ತಾಲೂಕು ಅಧ್ಯಕ್ಷ ಸುರೇಶ ಕಿರಸೂರ, ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸದಿದ್ದರೆ ಹೋರಾಟ ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

ಇಂಡಿ ತಾಲೂಕು ಅಧ್ಯಕ್ಷ ಮಾಳಪ್ಪ ಪೂಜಾರಿ ಮಾತನಾಡಿ, ರೈತರ ಸಂಕಷ್ಟವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಕೂಡಲೇ ಬರ ಘೋಷಣೆ ಮಾಡಿ ಪರಿಹಾರ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು. ಪ್ರತಿ ಎಕರೆಗೆ 50 ಸಾವಿರ ಬರ ಪರಿಹಾರ ನೀಡಬೇಕು, ಬೆಳೆ ವಿಮೆ ಪರಿಹಾರವನ್ನು ಶೀಘ್ರ ಬಿಡುಗಡೆ ಮಾಡಬೇಕು, ಜಿಲ್ಲೆಯ ಕೆರೆ-ಕೊಳ್ಳ, ಹಳ್ಳ-ಕಾಲುವೆಗಳನ್ನು ತುಂಬಿಸಬೇಕು, ಜಾನುವಾರುಗಳಿಗೆ ಮೇವು ಒದಗಿಸಬೇಕು ಹಾಗೂ ನಿರುದ್ಯೋಗಿ ಯುವಕರಿಗೆ ಉದ್ಯೋಗ ಕಲ್ಪಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.  ಜಿಲ್ಲಾಧ್ಯಕ್ಷ ಸಂಗಮೇಶ ಸಾಗರ, ಮಹಾದೇವ ಬನಸೋಡೆ, ಸುರೇಖಾ ರಾಜಪೂತ, ಶ್ರೀಶೈಲ ಮುಳಜಿ ಸೇರಿದಂತೆ ನೂರಾರು ರೈತರು ಹೋರಾಟದಲ್ಲಿ ಪಾಲ್ಗೊಂಡಿದ್ದರು.