ಆಲಮಟ್ಟಿ ಸಂತ್ರಸ್ತರಿಗೆ ಹಕ್ಕುಪತ್ರ ನೀಡಲು ಆಗ್ರಹ: ಕೊಲ್ಹಾರದಲ್ಲಿ ರೈತ ಸಂಘದಿಂದ ಬೃಹತ್ ಪ್ರತಿಭಟನೆ
Demand to issue title deeds to Almatti project-affected people: Farmers' association stages massive
ಕೊಲ್ಹಾರ: ಕೃಷ್ಣಾ ಮೇಲ್ದಂಡೆ ಯೋಜನೆಗಾಗಿ ಭೂಮಿ ಹಾಗೂ ಮನೆ ಕಳೆದುಕೊಂಡ ಮುಳುಗಡೆ ಸಂತ್ರಸ್ತರಿಗೆ 30 ವರ್ಷ ಕಳೆದರೂ ಹಕ್ಕುಪತ್ರ ಮತ್ತು ಉತಾರಿ ನೀಡದಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಬುಧವಾರ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ರೈತ ಸಂಘದ ರಾಜ್ಯ ಗೌರವಾಧ್ಯಕ್ಷ ಶಶಿಕಾಂತ ಗುರೂಜಿ ಹಾಗೂ ರಾಜ್ಯಾಧ್ಯಕ್ಷ ಚೂನಪ್ಪ ಪೂಜಾರಿ ನೇತೃತ್ವದಲ್ಲಿ ಬಸವೇಶ್ವರ ವೃತ್ತದಿಂದ ತಹಶೀಲ್ದಾರ್ ಕಚೇರಿವರೆಗೆ ಸಾವಿರಾರು ರೈತರು ಬೃಹತ್ ಮೆರವಣಿಗೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಶಶಿಕಾಂತ ಗುರೂಜಿ ಆಕ್ರೋಶ:
1996ರಲ್ಲಿ ಜಮೀನು ಕಳೆದುಕೊಂಡ ಸಂತ್ರಸ್ತರಿಗೆ ಇಂದಿಗೂ ಹಕ್ಕುಪತ್ರ ನೀಡದಿರುವುದು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಹಿಡಿದ ಕನ್ನಡಿ. ಕನಿಷ್ಠ ಪರಿಹಾರಕ್ಕೆ ಭೂಮಿ ನೀಡಿದ ರೈತರ ಮೂಲಭೂತ ಸಮಸ್ಯೆಗಳಿಗೆ ಪರಿಹಾರ ಸಿಗದಿದ್ದರೆ ಬರುವ ಚುನಾವಣೆಯಲ್ಲಿ ಜನಪ್ರತಿನಿಧಿಗಳಿಗೆ ಸೂಕ್ತ ಉತ್ತರ ನೀಡಲಾಗುವುದು. ಪಟ್ಟಣದ ಸ್ಟೇಟ್ ಬ್ಯಾಂಕ್ ಹಿಂಭಾಗ ಕಳೆದ 25 ವರ್ಷಗಳಿಂದ ತಾತ್ಕಾಲಿಕವಾಗಿ ವಾಸಿಸುತ್ತಿರುವ ನಿರಾಶ್ರಿತರಿಗೆ ಮೂಲಭೂತ ಸೌಕರ್ಯ ಒದಗಿಸಬೇಕು ಮತ್ತು ಸರ್ಕಾರದಿಂದ ನಿವೇಶನ ಮಂಜೂರಾಗುವವರೆಗೆ ಅವರನ್ನು ತೆರವುಗೊಳಿಸಬಾರದು ಎಂದು ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿಗೆ ಆಗ್ರಹಿಸಿದರು.
ಬೆಳಗಾವಿ ಅಧಿವೇಶನದಲ್ಲಿ ಬೃಹತ್ ಹೋರಾಟ:
ರಾಜ್ಯಾಧ್ಯಕ್ಷ ಚೂನಪ್ಪ ಪೂಜಾರಿ ಮಾತನಾಡಿ, "ಆಲಮಟ್ಟಿ ಅಣೆಕಟ್ಟು ಎತ್ತರ, ಭೂ ಪರಿಹಾರ, ನೀರಾವರಿ ಸೇರಿದಂತೆ ರೈತರ ಬೇಡಿಕೆಗಳಿಗೆ 1 ಲಕ್ಷ ಕೋಟಿ ರೂ. ಅನುದಾನ ನೀಡುವಂತೆ ಒತ್ತಾಯಿಸಿ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ 50 ಲಕ್ಷ ಜನರ ಸಮ್ಮುಖದಲ್ಲಿ ಬೃಹತ್ ಹೋರಾಟ ರೂಪಿಸಲಾಗುವುದು. ನಿವೇಶನ ಹಂಚಿಕೆಯಲ್ಲಿ ಅಕ್ರಮ ಎಸಗಿದ ಅಧಿಕಾರಿಗಳ ವಿರುದ್ಧ ಪೊಲೀಸ್ ಕ್ರಮ ಕೈಗೊಳ್ಳಬೇಕು" ಎಂದು ಒತ್ತಾಯಿಸಿದರು.
ರೈತರ ಪ್ರಮುಖ ಬೇಡಿಕೆಗಳು:
1996ರ ಮುಳುಗಡೆ ಸಂತ್ರಸ್ತರಿಗೆ ತಕ್ಷಣವೇ ಹಕ್ಕುಪತ್ರ ಹಾಗೂ ಉತಾರಿ ವಿತರಿಸಬೇಕು.
ಮುಳವಾಡ ಏತ ನೀರಾವರಿ ಯೋಜನೆ ಮೂಲಕ ವಿಜಯಪುರ ಜಿಲ್ಲೆಯ ಎಲ್ಲಾ ಕೆರೆಗಳನ್ನು ತುಂಬಿಸಬೇಕು.
ಜನವರಿಯಿಂದ ಜುಲೈವರೆಗೆ ಕುಡಿಯುವ ನೀರಿಗಾಗಿ 20 ಟಿಎಂಸಿ ನೀರು ಕಾಯ್ದಿರಿಸಬೇಕು.
ಕೃಷಿ ಪಂಪ್ಸೆಟ್ಗಳಿಗೆ ಬೆಳಿಗ್ಗೆ 7 ಗಂಟೆ 3-ಫೇಸ್ ಹಾಗೂ ರಾತ್ರಿ ಸಿಂಗಲ್-ಫೇಸ್ ವಿದ್ಯುತ್ ಸತತವಾಗಿ ಪೂರೈಸಬೇಕು.
ಅಧಿಕಾರಿಗಳ ಭರವಸೆ – ಪ್ರತಿಭಟನೆ ವಾಪಸ್:
ಸ್ಥಳಕ್ಕೆ ಭೇಟಿ ನೀಡಿದ ಯುಕೆಪಿ ವಿಶೇಷ ಜಿಲ್ಲಾಧಿಕಾರಿ, ವಿಜಯಪುರ ಅಪರ ಜಿಲ್ಲಾಧಿಕಾರಿ, ಹೆಸ್ಕಾಂ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಪ್ರತಿಭಟನಾಕಾರರೊಂದಿಗೆ ಸುದೀರ್ಘ ಮಾತುಕತೆ ನಡೆಸಿದರು. ಬಾಕಿ ಉಳಿದಿರುವ ಸಂತ್ರಸ್ತರ ಬೇಡಿಕೆಗಳನ್ನು 4 ತಿಂಗಳ ಒಳಗಾಗಿ ಈಡೇರಿಸಲಾಗುವುದು ಎಂದು ಅಧಿಕಾರಿಗಳು ಲಿಖಿತ ಭರವಸೆ ನೀಡಿದ ಹಿನ್ನೆಲೆಯಲ್ಲಿ ಹೋರಾಟವನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಯಿತು.ಈ ಪ್ರತಿಭಟನೆಯಲ್ಲಿ ರೈತ ಸಂಘದ ಉಪಾಧ್ಯಕ್ಷ ಕಲ್ಲು ಸೊನ್ನದ, ಜಿಲ್ಲಾಧ್ಯಕ್ಷ ಸಂಗಮೇಶ ಸಗರ, ತಾಲೂಕು ಅಧ್ಯಕ್ಷ ಸೋಮು ಬಿರಾದಾರ, ಅಪ್ಪುಗೌಡ ಪಾಟೀಲ ಮನಗೂಳಿ, ರಾಹುಲ್ ಕುಬಕಡ್ಡಿ ಸೇರಿದಂತೆ ಸಾವಿರಾರು ರೈತರು ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 