ಜಿಲ್ಲಾ ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರೀಶೀಲನಾ ಸಭೆ
District level Pancha Guarantee Schemes progress review meeting
ಲೋಕದರ್ಶನ ವರದಿ
ಧಾರವಾಡ 05: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಶಕ್ತಿ, ಯುವನಿಧಿ, ಗೃಹ ಲಕ್ಷ್ಮಿ ಹಾಗೂ ಗೃಹ ಜ್ಯೋತಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಧಾರವಾಡ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ಪಾಟೀಲ ಅವರು ಹೇಳಿದರು. ಅವರು ಇಂದು (ಜೂ.06) ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರೀಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.
ಗೃಹ ಲಕ್ಷ್ಮಿ ಯೋಜನೆಯ ಅನರ್ಹ ಫಲಾನುಭವಿಗಳ ವಿವರವನ್ನು ಸಿದ್ದಪಡಿಸುವಂತೆ ಅಧಿಕಾರಿಗಳಿಗೆ ಕಳೆದ ಸಭೆಯಲ್ಲಿ ಸೂಚಿಸಲಾಗಿತ್ತು. ಈಗಾಗಲೇ 7,725 ಜನರು ನಿಧನರಾಗಿದ್ದಾರೆ. ಅದರಲ್ಲಿ 280 ಜನರನ್ನು ಗೃಹ ಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ. ನಕಲಿ ಮರಣ ಪ್ರಮಾಣ ಪತ್ರಗಳು ಕಂಡು ಬಂದಿವೆ. ಈ ಕುರಿತು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಅಧಿಕಾರಿಗಳು ಸಭೆಗೆ ಬರುವ ಮುನ್ನ ಮರಣ ಹೊಂದಿದವರ ವಿವರವನ್ನು ತಾಲ್ಲೂಕುವಾರು ಸಿದ್ಧಪಡಿಸಿಕೊಂಡು ಸಭೆ ಹಾಜರಾಗಬೇಕು ಎಂದು ಸಭೆಯಲ್ಲಿ ತಿಳಿಸಿದರು. ಯಾವುದೇ ಕಾರಣಕ್ಕೂ ಸರ್ಕಾರದ ಹಣ ದುರುಪಯೋಗ ಆಗಬಾರದು. ಏಪ್ರೀಲ್ ತಿಂಗಳಿನ ಗೃಹ ಲಕ್ಷ್ಮಿ ಯೋಜನೆ ಹಣ ಬಿಡುಗಡೆಯಾಗಿದೆ. ಮುಂದಿನ ದಿನಗಳಲ್ಲಿ ಮಾರ್ಚ ಹಾಗೂ ಮೇ ತಿಂಗಳ ಗೃಹ ಲಕ್ಷ್ಮಿ ಯೋಜನೆ ಹಣ ಬಿಡುಗಡೆಯಾಗಲಿದೆ ಎಂದು ಅವರು ಹೇಳಿದರು.
ಮಳೆಗಾಲ ಆರಂಭವಾಗುತ್ತಿರುವುದರಿಂದ ವಿದ್ಯುತ್ ಕಂಬಗಳ ಸ್ಥಿತಿಗಳ ಬಗ್ಗೆ ಹೆಸ್ಕಾಂ ಅಧಿಕಾರಿಗಳು ಗಮನ ಹರಿಸಬೇಕು. ವಿದ್ಯುತ್ ಮೀಟರ್ ಬದಲಾವಣೆ ಮಾಡಿಕೊಳ್ಳಲು ಅವಕಾಶ ನೀಡಲಾಗುತ್ತಿದೆ. ಗ್ರಾಮ ಪಂಚಾಯತ ವ್ಯಾಪ್ತಿಯಿಂದ ಹೊರಗಿರುವ ಕಟ್ಟಡಗಳು, ಮನೆಗಳು ಸಹ ವಿದ್ಯುತ್ ಸಂಪರ್ಕ ಪಡೆದುಕೊಳ್ಳಬಹುದು. ಗ್ರಾಮೀಣ ಭಾಗದಲ್ಲಿ ಬೀಳುವ ಹಂತದಲ್ಲಿರುವ ವಿದ್ಯುತ್ ಕಂಬಗಳನ್ನು ಸ್ಥಳಾಂತರ ಮಾಡುವ ಬಗ್ಗೆ ಪ್ರಾಧಿಕಾರದ ಸದಸ್ಯರು ಅಧಿಕಾರಿಗಳ ಗಮನಕ್ಕೆ ತರಬೇಕು. ಕುಂದಗೋಳದಿಂದ ಯರಗುಪ್ಪಿಗೆ ಹೊಸ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾರ್ಯಗಳ ಬಗ್ಗೆ ಚರ್ಚಿಸಲಾಗುವುದು ಎಂದು ಪ್ರಾಧಿಕಾರದ ಅಧ್ಯಕ್ಷರು ಹೇಳಿದರು.
ಯುವನಿಧಿ ಯೋಜನೆ ಕುರಿತು ಅರ್ಹ ಫಲಾನುಭವಿಗಳಿಗೆ ತಿಳಿಸಬೇಕಿದೆ. ಯುವ ನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಆಗುತ್ತಿರುವ ಸಮಸ್ಯೆಗಳನ್ನು ಅಧಿಕಾರಿಗಳು ಕೂಡಲೇ ಪರಿಹರಿಸಬೇಕು. ಫಲಾನುಭವಿಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ತೊಂದರೆ ಆಗದಂತೆ ಕ್ರಮ ವಹಿಸಬೇಕಾಗುತ್ತದೆ. ಐಟಿಐ ಹಾಗೂ ಜಿಟಿಟಿಸಿ ಕಾಲೇಜುಗಳಲ್ಲಿ ಕೌಶಲ್ಯ ತರಬೇತಿಗಳನ್ನು ನಡೆಸಬೇಕು. ಯುವ ನಿಧಿ ಯೋಜನೆಯ ಹಣ ಜನವರಿ ತಿಂಗಳವರೆಗೆ ಮಾತ್ರ ಫಲಾನುಭವಿಗಳಿಗೆ ಪಾವತಿಯಾಗಿದ್ದು, ಫೆಬ್ರವರಿಯಿಂದ ಮೇ ತಿಂಗಳವರೆಗೆ ಯಾವ ಕಾರಣಕ್ಕೆ ಹಣ ಪಾವತಿಯಾಗಿಲ್ಲ ಎಂಬುದರ ಬಗ್ಗೆ ಅಧಿಕಾರಿಗಳು ಕ್ರಮ ವಹಿಸಬೇಕಾಗುತ್ತದೆ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅನ್ನಭಾಗ್ಯ ಯೋಜನೆಯಡಿ ಸಮರ್ಕವಾಗಿ ಪಡಿತರವನ್ನು ವಿತರಣೆ ಮಾಡಬೇಕು. ಪಡಿತರ ಚೀಟಿದಾರರು ಬಯೋ ಮೆಟ್ರಿಕ್ ಸರ್ವರ್ ಸಮಸ್ಯೆ ಕುರಿತು ಹಲವಾರು ದೂರುಗಳನ್ನು ನೀಡಿದ್ದಾರೆ. ಸರ್ವರ್ ಸಮಸ್ಯೆಯನ್ನು ಪರಿಹರಿಸಲು ಸೂಕ್ತ ಕ್ರಮಗಳನ್ನು ಅಧಿಕಾರಿಗಳು ಕೈಗೊಳ್ಳಲು ಮುಂದಾಗಬೇಕು ಎಂದು ಹೇಳಿದರು.
ಶಕ್ತಿ ಯೋಜನೆಯು ಮಹಿಳೆಯರಿಗೆ ಸಹಾಯಕವಾಗಿದೆ. ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲು ಸರ್ಕಾರ ಮುಂದಾಗಿದೆ. ಮುಮ್ಮಿಗಟ್ಟಿ ಐಟಿಐ ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಬಸ್ ವ್ಯವಸ್ಥೆ ಕಲ್ಪಿಸಬೇಕು. ಶಾಲಾ ವಿದ್ಯಾರ್ಥಿಗಳಿಗೆ ಅನುಕೂಲಕರವಾಗುವ ನಿಟ್ಟಿನಲ್ಲಿ ದೇವಿಕೊಪ್ಪಕ್ಕೆ ಬಸ್ ಸೌಲಭ್ಯ ಒದಗಿಸಬೇಕಿದೆ. ನಿಗದಿಗೆ ಹೊಸ ಬಸ್ ವ್ಯವಸ್ಥೆ ಕಲ್ಪಿಸಿರುವುದು ಸ್ವಾಗತಾರ್ಹವಾಗಿದೆ. ಪ್ರಯಾಣಿಕರಿಗೆ ತೊಂದರೆಗಳು ಉಂಟಾಗದಂತೆ ಬಸ್ ವ್ಯವಸ್ಥೆ ಕಲ್ಪಿಸಲು ಅಧಿಕಾರಿಗಳು ಮುಂದಾಗಬೇಕು ಎಂದು ಪ್ರಾಧಿಕಾರದ ಅಧ್ಯಕ್ಷರು ಅಧಿಕಾರಿಗಳಿಗೆ ಸೂಚಿಸಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ರೇಹನ್ ರಝಾ ಐನಾಪೂರಿ ಅವರು ಮಾತನಾಡಿ, ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಅನುಕೂಲವಾಗಿದೆ. ಪ್ರಯಾಣಿಕರಿಗೆ ಸಮರ್ಕವಾಗಿ ಬಸ್ ವ್ಯವಸ್ಥೆ ಕಲ್ಪಿಸಲು ಅಧಿಕಾರಿಗಳು ಮುಂದಾಗಬೇಕು ಎಂದು ಸಭೆಗೆ ತಿಳಿಸಿದರು. ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಮಾತನಾಡಿ, ಗೃಹ ಲಕ್ಷ್ಮಿ ಯೋಜನೆಯಡಿ ಮರಣ ಹೊಂದಿದವರ ಹೆಸರನ್ನು ತೆಗೆದು ಹಾಕಲು ಅಧಿಕಾರಿಗಳು ಕ್ರಮ ವಹಿಸಬೇಕು. ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿ ನೀಡಬೇಕಿದೆ. ಹೆಸ್ಕಾಂ ಮಾನದಂಡಗಳ ಅನ್ವಯ ಹೊಸ ವಿದ್ಯುತ್ ಸಂಪರ್ಕವನ್ನು ಜನರು ಪಡೆಯಬಹುದು. ದೇವಿಕೊಪ್ಪದ ಹೆಸ್ಕಾಂ ಭೂ ಸ್ವಾಧೀನ ಪ್ರಕ್ರಿಯೆಯನ್ನು ಶೀಘ್ರದಲ್ಲೇ ಪರಿಹರಿಸಲು ಕ್ರಮ ವಹಿಸಲಾಗುವುದು ಎಂದರು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಮುರುಗಯ್ಯಾ ವಿರಕ್ತಮಠ, ಶಾಂತಪ್ಪ ಎಸ್.ಅಕ್ಕಿ, ಸುಧೀರ ಎಸ್.ಬೋಳಾರ, ರತ್ನಾ ತೇಗೂರಮಠ ಅವರು ವೇದಿಕೆಯಲ್ಲಿದ್ದರು. ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯರಾದ ಬಸಪ್ಪ ಮಹಾಬಳೇಶ್ವರ ಬಾವಕಾರ, ಮಂಜುನಾಥ ಮಾಯಣ್ಣನವರ, ವರ್ಧಮಾನ ಹಿರೇಗೌಡರ, ಶಿವಾನಂದ ಭೂಮಣ್ಣನವರ, ಸಾವಿತ್ರಿ ಬಸವರಾಜ್ ಭಗವತಿ, ಶಿವಕುಮಾರ ಕೆ.ಖಂಡೆಕರ, ನೆಹರು ಪಾಟೀಲ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಇತರರು ಉಪಸ್ಥಿತರಿದ್ದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 