ಬರದಿಂದ ಸಂಕಷ್ಟ: ಉದ್ಯೋಗ ಖಾತ್ರಿ ಕೂಲಿ ವಿಳಂಬ

ಬರದಿಂದ ಸಂಕಷ್ಟ: ಉದ್ಯೋಗ ಖಾತ್ರಿ ಕೂಲಿ ವಿಳಂಬ  Drought-induced distress: Delay in employment guarantee wages


ಅನಂತಪುರ 11: ಗಡಿ ಪ್ರದೇಶದಲ್ಲಿ ಬರ ಪರಿಸ್ಥಿತಿ ತೀವ್ರವಾಗಿದ್ದು, ಗ್ರಾಮೀಣ ಜನರು ಉದ್ಯೋಗದ ಕೊರತೆ ಹಾಗೂ ಆಹಾರದ ಸಮಸ್ಯೆ ಎದುರಿಸುತ್ತಿದ್ದಾರೆ. ಪರಿಸ್ಥಿತಿಯ ಗಂಭೀರತೆಯನ್ನು ಗಮನಿಸಿರುವ ಸರ್ಕಾರ ಉದ್ಯೋಗ ಖಾತ್ರಿ ಯೋಜನೆಯಡಿ ವಿವಿಧ ಕಾಮಗಾರಿಗಳನ್ನು ಆರಂಭಿಸಿದೆ.  

ಕಾರ್ಮಿಕರಿಗೆ ದಿನಕ್ಕೆ ಎರಡು ಬಾರಿ ಜಿಪಿಎಸ್ ಹಾಜರಾತಿ ಕಡ್ಡಾಯಗೊಳಿಸಿರುವುದರಿಂದ, ಕೆಲಸಕ್ಕೆ ಹಾಜರಾಗುವವರ ಸಂಖ್ಯೆಯೂ ಹೆಚ್ಚಾಗಿದೆ. ಆದರೆ ಕೆಲಸ ಮಾಡಿದರೂ ಕಳೆದ 21 ದಿನಗಳಿಂದ ಕೂಲಿ ಪಾವತಿಯಾಗದಿರುವುದು ಕಾರ್ಮಿಕರ ಸಂಕಷ್ಟವನ್ನು ಮತ್ತಷ್ಟು ಹೆಚ್ಚಿಸಿದೆ. ಕೂಲಿ ಹಣವನ್ನು ಪ್ರತಿ ವಾರವೂ ತಕ್ಷಣ ಖಾತೆಗಳಿಗೆ ಜಮಾ ಮಾಡಬೇಕು ಎಂದು ಕಾರ್ಮಿಕರು ಒತ್ತಾಯಿಸಿದ್ದಾರೆ.  

ಗಡಿ ಪ್ರದೇಶದ ಕೃಷಿ ಸಂಪೂರ್ಣವಾಗಿ ಮಳೆಯನ್ನೇ ಅವಲಂಬಿಸಿದೆ. ಸಮಯಕ್ಕೆ ಮಳೆ ಬಂದರೆ ಕೃಷಿ ಚಟುವಟಿಕೆಗಳು ಉತ್ತಮವಾಗುತ್ತವೆ; ಇಲ್ಲದಿದ್ದರೆ ರೈತರು ಸಂಕಷ್ಟಕ್ಕೆ ಸಿಲುಕುತ್ತಾರೆ. ಈ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗಗಳಲ್ಲಿ ಉದ್ಯೋಗ ಖಾತ್ರಿ ಕಾಮಗಾರಿಗಳಿಗೆ ಬೇಡಿಕೆ ಹೆಚ್ಚಾಗಿದೆ.  

ಅನಂತಪುರ ತಾಲೂಕಿನ ಕಿಳೇಗಾಂವ್, ಶಿರೂರು ಸೇರಿದಂತೆ ಹಲವು ಗ್ರಾಮಗಳಲ್ಲಿ ಕೆರೆಗಳಿಂದ ಹೂಳು ತೆಗೆಯುವುದು, ಗ್ರಾಮಗಳ ಸ್ವಚ್ಛತೆ ಸೇರಿದಂತೆ ವಿವಿಧ ಕಾಮಗಾರಿಗಳು ನಡೆಯುತ್ತಿವೆ. ಆದರೆ ಕೂಲಿ ಪಾವತಿಯಲ್ಲಿ ವಿಳಂಬವಾಗುತ್ತಿರುವುದರಿಂದ ರೈತ ಕಾರ್ಮಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.

ಸರ್ಕಾರದ ನಿಯಮಗಳ ಪ್ರಕಾರ ಕಾಮಗಾರಿ ನಡೆಯುವ ಸ್ಥಳದಲ್ಲಿ ಕಾರ್ಮಿಕರಿಗೆ ಕುಡಿಯುವ ನೀರು ಹಾಗೂ ವೈದ್ಯಕೀಯ ಸೌಲಭ್ಯ ಸೇರಿದಂತೆ ಅಗತ್ಯ ಮೂಲಸೌಕರ್ಯ ಒದಗಿಸಬೇಕು. ಆದರೆ ಹಲವು ಸ್ಥಳಗಳಲ್ಲಿ ಈ ಸೌಲಭ್ಯಗಳು ಲಭ್ಯವಿಲ್ಲ ಎಂಬ ಆರೋಪ ಕೇಳಿಬಂದಿದೆ. ಆಹಾರದ ಸಮಸ್ಯೆಯ ನಡುವೆಯೂ 75ರಿಂದ 80 ವರ್ಷ ವಯಸ್ಸಿನ ಕಾರ್ಮಿಕರೂ ಕೆಲಸಕ್ಕೆ ಬರುತ್ತಿರುವುದು ಪರಿಸ್ಥಿತಿಯ ಗಂಭೀರತೆಯನ್ನು ತೋರಿಸುತ್ತದೆ.  

ಪ್ರತಿ ಗ್ರಾಮದಲ್ಲೂ ಉದ್ಯೋಗ ಖಾತ್ರಿ ಯೋಜನೆಯಡಿ ಹೆಚ್ಚಿನ ಕಾಮಗಾರಿಗಳನ್ನು ಆರಂಭಿಸಿ, ಕಾರ್ಮಿಕರಿಗೆ ಸಮಯಕ್ಕೆ ಸರಿಯಾಗಿ ಕೂಲಿ ಪಾವತಿಸುವ ಜೊತೆಗೆ ಕೆಲಸದ ಸ್ಥಳದಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಗ್ರಾಮ ಪಂಚಾಯಿತಿ ಹಾಗೂ ಕಾಯಕ ಮಿತ್ರೆ ಸುಜಾತಾ ಇರಳಿ ಅವರು, ಕೆ2 ಮೂಲಕ ಕಾರ್ಮಿಕರ ಖಾತೆಗೆ ಕೂಲಿ ಹಣ ಜಮಾ ಮಾಡುವ ಪ್ರಕ್ರಿಯೆಯಲ್ಲಿ ವಿಳಂಬವಾಗಿದೆ ಎಂದು ತಿಳಿಸಿದ್ದಾರೆ. ಕಾರ್ಮಿಕರು ಸಮಯಕ್ಕೆ ಸರಿಯಾಗಿ ಹಾಜರಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ದಿನಕ್ಕೆ ಎರಡು ಬಾರಿ ಜಿಪಿಎಸ್ ಹಾಜರಾತಿ ಮಾಡಲಾಗುತ್ತಿದೆ ಎಂದೂ ಅವರು ಹೇಳಿದ್ದಾರೆ.