ಈದ್ ಮಿಲಾದ್ ಶಾಂತಿ-ಸೌಹಾರ್ದದಿಂದ ಆಚರಿಸಲು ಕರೆ

ಈದ್ ಮಿಲಾದ್ ಶಾಂತಿ-ಸೌಹಾರ್ದದಿಂದ ಆಚರಿಸಲು ಕರೆ  Eid Milad is a call to celebrate with peace and harmony


ಸವದತ್ತಿ  21: ಈದ್ ಮಿಲಾದ್ ಹಬ್ಬವನ್ನು ಅಣ್ಣತಮ್ಮಂದಿರ ಭಾವನೆಯೊಂದಿಗೆ ಶಾಂತಿ ಮತ್ತು ಸೌಹಾರ್ದದಿಂದ ಆಚರಿಸಬೇಕು ಎಂದು ನಗರ ಪೊಲೀಸ್ ಠಾಣೆಯ ವೃತ್ತ ನೀರೀಕ್ಷಕ (ಪಿಐ) ಸುರೇಶ ಬೆಂಡೆಗುಂವಳ ಕರೆ ನೀಡಿದರು.  

ಆಗಸ್ಟ್‌ 26ರಂದು ನಡೆಯಲಿರುವ ಈದ್ ಮಿಲಾದ್ ಹಿನ್ನೆಲೆಯಲ್ಲಿ ನಗರದ ಪೊಲೀಸ್ ಠಾಣೆ ಆವರಣದಲ್ಲಿ ನಡೆದ ಪೂರ್ವಭಾವಿ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಗರದಲ್ಲಿ ಯಾವುದೇ ಹಬ್ಬ ಬಂದರೂ ಹಿಂದೂ-ಮುಸ್ಲಿಂ ಬಾಂಧವರು ಒಗ್ಗಟ್ಟಿನಿಂದ ಸಂಭ್ರಮಿಸುವುದು ವಿಶೇಷವಾಗಿದ್ದು, ಶಾಂತಿ ಮತ್ತು ಸೌಹಾರ್ದತೆಯ ಪರಂಪರೆಯನ್ನು ಮುಂದುವರಿಸಬೇಕು ಎಂದರು.  

ಶಾಂತಿಗೆ ಧಕ್ಕೆ ತರುವ ಯಾವುದೇ ಅನಪೇಕ್ಷಿತ ಘಟನೆಗಳಿಗೆ ಅವಕಾಶ ನೀಡಬಾರದು. ಸಾರ್ವಜನಿಕರು ಹಾಗೂ ಯುವಕರು ಪೊಲೀಸರೊಂದಿಗೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.  

ಸಭೆಯಲ್ಲಿ ಪಿಎಸ್‌ಐ ರಾಜು ಪೂಜೇರಿ ಅವರು, ಎಲ್ಲರೂ ಸಂಯಮದಿಂದ ವರ್ತಿಸಿ ಹಬ್ಬವನ್ನು ಯಶಸ್ವಿಯಾಗಿ ಆಚರಿಸಬೇಕು. ಬೈಕ್‌ನಲ್ಲಿ ಸಂಚರಿಸುವಾಗ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ತಿಳಿಸಿದರು.  

ಸಭೆಯಲ್ಲಿ ಪೊಲೀಸ್ ಸಿಬ್ಬಂದಿ, ವಿವಿಧ ಸಮುದಾಯಗಳ ಮುಖಂಡರು ಹಾಗೂ ಪ್ರಮುಖರು ಉಪಸ್ಥಿತರಿದ್ದು, ಈದ್ ಮಿಲಾದ್ ಹಬ್ಬವನ್ನು ಶಾಂತಿ ಮತ್ತು ಸೌಹಾರ್ದತೆಯಿಂದ ಆಚರಿಸಲು ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.