ಮನೆಗಳ ಹಕ್ಕುಪತ್ರ ನೀಡದಿದ್ದರೆ ಚುನಾವಣೆ ಬಹಿಷ್ಕಾರ: ಹಂದಿಗುಂದ ನಿವಾಸಿಗಳ ಎಚ್ಚರಿಕೆ

ಮನೆಗಳ ಹಕ್ಕುಪತ್ರ ನೀಡದಿದ್ದರೆ ಚುನಾವಣೆ ಬಹಿಷ್ಕಾರ: ಹಂದಿಗುಂದ ನಿವಾಸಿಗಳ ಎಚ್ಚರಿಕೆ  Election boycott if house title deeds are not issued: Handigunda residents' warning

ಪಾಲಬಾವಿ 19 : ಹಂದಿಗುಂದ ಗ್ರಾಮದ ವಾರ್ಡ್‌ ನಂ.3ರ ಅಂಬೇಡ್ಕರ್ ನಗರ ಕಾಲೋನಿ ನಿವಾಸಿಗಳಿಗೆ ಮನೆಗಳ ನಿವೇಶನದ ಹಕ್ಕುಪತ್ರ ನೀಡದಿರುವುದನ್ನು ಖಂಡಿಸಿ, ಮುಂಬರುವ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆಗಳನ್ನು ಬಹಿಷ್ಕರಿಸುವುದಾಗಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಬಸವರಾಜ ದೇವರವರ ತಿಳಿಸಿದ್ದಾರೆ. ಸುಮಾರು 70 ವರ್ಷಗಳಿಂದ 300ಕ್ಕೂ ಹೆಚ್ಚು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಬಡ ಕುಟುಂಬಗಳು ಇಲ್ಲಿ ವಾಸಿಸುತ್ತಿದ್ದು, ತಮ್ಮ ಮನೆಗಳಿಗೆ ಹಕ್ಕುಪತ್ರ ನೀಡುವಂತೆ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ತಹಶೀಲ್ದಾರ್ ಸೇರಿದಂತೆ ಹಲವು ಅಧಿಕಾರಿಗಳು, ಸಂಸದರು ಹಾಗೂ ಶಾಸಕರಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅವರು ಆರೋಪಿಸಿದರು. ಈ ಕುರಿತು ಗ್ರಾಪಂ ಪಿಡಿಓ ಶೋಭಾ ಪೂಜಾರಿ ಅವರಿಗೆ ನಿವಾಸಿಗಳು ಮನವಿ ಸಲ್ಲಿಸಿದರು.