ಗದಗ ತಾರಾನಾಥ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯಕ್ಕೆ 50ರ ಸಂಭ್ರಮ

ಗದಗ ತಾರಾನಾಥ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯಕ್ಕೆ 50ರ ಸಂಭ್ರಮ Gadag Taranath Government Ayurvedic Medical College Celebrates Golden Jubilee

 ಬಳ್ಳಾರಿ 23: ಅತ್ಯಂತ ಸರಳ ಕನಸಿನೊಂದಿಗೆ ಆರಂಭವಾದ ಈ ಮಹಾವಿದ್ಯಾಲಯ ಇಂದು ಹೆಮ್ಮರವಾಗಿ ಬೆಳೆದಿದ್ದು, ಇಲ್ಲಿ ವಿದ್ಯಾಭ್ಯಾಸ ಮಾಡಿದ ಹಳೆಯ ವಿದ್ಯಾರ್ಥಿಗಳು ಕರ್ನಾಟಕ ಮಾತ್ರವಲ್ಲದೆ ದೇಶದ ವಿವಿಧ ಭಾಗಗಳಲ್ಲಿ ಆಯುರ್ವೇದ ಸೇವೆ ಸಲ್ಲಿಸುತ್ತಿರುವುದು ಸಂಸ್ಥೆಗೆ ಹೆಮ್ಮೆಯ ವಿಷಯವಾಗಿದೆ ಎಂದು ಸಂಸ್ಥೆಯ ನಿವೃತ್ತ ಪ್ರಾಚಾರ್ಯ ಡಾ. ಸೈಯದ್ ಅತ್ತಾರ್ ಫಾತಿಮಾ ಹೇಳಿದರು. ನಗರದ ತಾರಾನಾಥ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಆಸ್ಪತ್ರೆಯ ಸರ್ಕಾರಿ ಸೇವೆಗೆ 50 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ‘ಸುವರ್ಣ ಸಂಭ್ರಮ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.  

ಈ ಸಂಭ್ರಮ ಕೇವಲ ಐವತ್ತು ವರ್ಷಗಳ ಆಚರಣೆಯಲ್ಲ; ಶತಮಾನೋತ್ಸವದತ್ತ ಸಾಗುತ್ತಿರುವ ಸಂಸ್ಥೆಯ ಪರಿವರ್ತನೆಯ ಪಯಣದ ಪ್ರಮುಖ ಘಟ್ಟವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.  ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ರಾಜಶೇಖರ್ ಎಸ್‌. ಗಾಣಿಗೇರ ಮಾತನಾಡಿ, ಸುವರ್ಣ ಸಂಭ್ರಮವು ಸಂಸ್ಥೆಯ ಸುದೀರ್ಘ ಸಾಧನೆಗಳನ್ನು ಸ್ಮರಿಸುವುದರ ಜೊತೆಗೆ, ಶತಮಾನೋತ್ಸವದತ್ತ ಸಾಗುವ ಅಭಿವೃದ್ಧಿಯ ಪಯಣಕ್ಕೆ ಹೊಸ ದಿಕ್ಕು ನೀಡಲಿದೆ ಎಂದರು.  ಕೆಎಂಆರ್ಸಿ ಅನುದಾನದಡಿ ನಡೆಯುತ್ತಿರುವ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳು, ಮಹಾವಿದ್ಯಾಲಯದ ಶೈಕ್ಷಣಿಕ ಚಟುವಟಿಕೆಗಳು ಹಾಗೂ ಆಸ್ಪತ್ರೆಯ ಸೇವಾ ವಿಸ್ತರಣೆ ಕುರಿತು ಅವರು ಮಾಹಿತಿ ನೀಡಿದರು. ಸಂಸ್ಥೆಯ ಸಮಗ್ರ ಅಭಿವೃದ್ಧಿಗಾಗಿ ಕೈಗೊಳ್ಳಲಾಗುತ್ತಿರುವ ವಿವಿಧ ಯೋಜನೆಗಳ ವಿವರಗಳನ್ನು ಹಂಚಿಕೊಂಡರು.