ಬೆಂಗಳೂರಿನಲ್ಲಿ ಜುಲೈ 11 ರಂದು ಸರ್ಕಾರಿ ನೌಕರರ ಅಭಿನಂದನಾ ಸಮಾರಂಭ

ಬೆಂಗಳೂರಿನಲ್ಲಿ ಜುಲೈ 11 ರಂದು ಸರ್ಕಾರಿ ನೌಕರರ ಅಭಿನಂದನಾ ಸಮಾರಂಭ   Government employees' felicitation ceremony in Bengaluru on July 11

ಲೋಕದರ್ಶನ ವರದಿ 

            ಬಳ್ಳಾರಿ  09: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ನೂತನ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಹಾಗೂ ಉಪ ಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ್ ಅವರಿಗೆ ‘ನಮ್ಮಭಿಮಾನದ ಅಭಿನಂದನಾ ಸಮಾರಂಭ’ ಹಾಗೂ ಪ್ರಮುಖ ಬೇಡಿಕೆಗಳ ಹಕ್ಕೊತ್ತಾಯ ಕಾರ್ಯಕ್ರಮವನ್ನು ಜು.11 ರಂದು ಬೆಂಗಳೂರಿನ ಅರಮನೆ ಮೈದಾನದ ‘ತ್ರಿಪುರ ವಾಸಿನಿ’ಯಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷರು ಹಾಗೂ ರಾಜ್ಯ ಉಪಾಧ್ಯಕ್ಷರಾದ ಡಾ. ನೆಲ್ಲುದ್ರಿ ಸದಾನಂದ ತಿಳಿಸಿದ್ದಾರೆ. ರಾಜ್ಯಾಧ್ಯಕ್ಷ ಸಿ.ಎಸ್‌.ಷಡಾಕ್ಷರಿ ಅವರ ನೇತೃತ್ವದಲ್ಲಿ ನಡೆಯಲಿರುವ ಈ ಸಮಾರಂಭದ ದಿವ್ಯ ಸಾನಿಧ್ಯವನ್ನು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರುಗಳಾದ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ಹಾಗೂ ತುಮಕೂರು ಸಿದ್ದಗಂಗಾ ಮಠದ ಸಿದ್ಧಲಿಂಗ ಮಹಾಸ್ವಾಮೀಜಿಯವರು ವಹಿಸಲಿದ್ದಾರೆ. 

*ಸಿಜಿಹೆಚ್‌ಎಸ್ ದರ ಹೆಚ್ಚಳಕ್ಕೆ ಕೃತಜ್ಞತೆ:* 

ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ವಹಿಸಿಕೊಂಡ ತಕ್ಷಣವೇ ಸರ್ಕಾರಿ ನೌಕರರ ಆರೋಗ್ಯ ಚಿಕಿತ್ಸೆಗೆ ಸಂಬಂಧಿಸಿದ ಸಿಜಿಹೆಚ್‌ಎಸ್ ದರಗಳನ್ನು ಹೆಚ್ಚಿಸಿ ಆದೇಶ ಹೊರಡಿಸಿದ್ದಾರೆ. ಇದರಿಂದ ಸರ್ಕಾರಕ್ಕೆ 430 ಕೋಟಿ ರೂ.ಗಳ ಹೆಚ್ಚುವರಿ ಅನುದಾನ ವೆಚ್ಚವಾಗಲಿದ್ದು, ಈ ಹಿತರಕ್ಷಣಾ ಕ್ರಮಕ್ಕಾಗಿ ಸಂಘವು ಮುಖ್ಯಮಂತ್ರಿಗಳಿಗೆ ಮತ್ತು ಉಪ ಮುಖ್ಯಮಂತ್ರಿಗಳಿಗೆ ವಿಶೇಷ ಅಭಿನಂದನೆ ಸಲ್ಲಿಸಲಿದೆ. 

*ಪ್ರಮುಖ ಬೇಡಿಕೆಗಳ ಹಕ್ಕೊತ್ತಾಯ:* 

ಸಹಕಾರ ಮತ್ತು ಸಮನ್ವಯತೆಯಿಂದ ಬೇಡಿಕೆಗಳನ್ನು ಈಡೇರಿಸಿಕೊಳ್ಳುವ ಸಂಪ್ರದಾಯ ಹೊಂದಿರುವ ಸಂಘವು, ಈ ವೇದಿಕೆಯ ಮೂಲಕ ಸರ್ಕಾರದ ಮುಂದೆ ಎರಡು ಪ್ರಮುಖ ಬೇಡಿಕೆಗಳನ್ನು ಮಂಡಿಸಲಿದೆ. 2023ರ ಚುನಾವಣಾ ಪ್ರಣಾಳಿಕೆಯಲ್ಲಿ ಸರ್ಕಾರ ನೀಡಿದ್ದ ಭರವಸೆಯಂತೆ ರಾಷ್ಟ್ರೀಯ ಪಿಂಚಣಿ ಯೋಜನೆ ರದ್ದುಪಡಿಸಿ, ಹಳೇ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸಬೇಕು. ಈಗಾಗಲೇ ಕಾಂಗ್ರೆಸ್ ಆಡಳಿತವಿರುವ 5 ರಾಜ್ಯಗಳಲ್ಲಿ ಇದನ್ನು ಜಾರಿಗೊಳಿಸಲಾಗಿದೆ. ದೇಶದ ಸುಮಾರು 22 ರಾಜ್ಯಗಳಲ್ಲಿ ಈಗಾಗಲೇ ಕೇಂದ್ರ ಮಾದರಿ ವೇತನ ಜಾರಿಯಲ್ಲಿದೆ. ರಾಜ್ಯದ 7ನೇ ವೇತನ ಆಯೋಗವೂ ಸಹ ತನ್ನ ವರದಿಯಲ್ಲಿ ಇದನ್ನು ಅನುಸರಿಸಲು ಶಿಫಾರಸ್ಸು ಮಾಡಿದ್ದು, ಇದನ್ನು ಕರ್ನಾಟಕದಲ್ಲೂ ಅನುಷ್ಠಾನಗೊಳಿಸಬೇಕು. 

*ಬಳ್ಳಾರಿ ಜಿಲ್ಲೆಯಿಂದ ವ್ಯಾಪಕ ಬೆಂಬಲ:* 

ಜುಲೈ 11 ಎರಡನೇ ಶನಿವಾರದ ರಜಾದಿನವಾಗಿರುವುದರಿಂದ ಜಿಲ್ಲೆಯ ಸಂಡೂರು, ಸಿರುಗುಪ್ಪ, ಕಂಪ್ಲಿ, ಕುರಗೋಡು ತಾಲೂಕುಗಳು ಸೇರಿದಂತೆ ಬಳ್ಳಾರಿ ಜಿಲ್ಲೆಯಿಂದ ಅಂದಾಜು 500ಕ್ಕೂ ಹೆಚ್ಚು ಸರ್ಕಾರಿ ನೌಕರರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬಿ.ಎಲ್‌.ಒ ಹಾಗೂ ಎಸ್‌.ಐ.ಆರ್ ಕಾರ್ಯಕ್ಕೆ ನಿಯೋಜನೆಗೊಂಡಿರುವ ಸಿಬ್ಬಂದಿಗಳಿಗೆ ಶನಿವಾರದಂದು ಕಾರ್ಯಕ್ರಮದಲ್ಲಿ ಭಾಗವಹಿಸಲು ವಿನಾಯಿತಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲಾಗಿದ್ದು, ಈ ಕಾರ್ಯವನ್ನು ಮುಂದಿನ ದಿನಗಳಲ್ಲಿ ಸರಿದೂಗಿಸಿಕೊಡಲಾಗುವುದು. ನೌಕರರ ಅನುಕೂಲಕ್ಕಾಗಿ ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಿಂದ ವಾಹನ ಸೌಕರ್ಯ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.