ಆಪ್ತ ಸಮಾಲೋಚನೆ ಮೂಲಕ ಸಂತ್ರಸ್ತರಿಗೆ ಸೂಕ್ತ ನೆರವು ನ್ಯಾಯಾಧೀಶೆ ಶ್ರೀಶೈಲಜಾ

 ಆಪ್ತ ಸಮಾಲೋಚನೆ ಮೂಲಕ ಸಂತ್ರಸ್ತರಿಗೆ ಸೂಕ್ತ ನೆರವು ನ್ಯಾಯಾಧೀಶೆ ಶ್ರೀಶೈಲಜಾ  Judge Srishailaja provides appropriate assistance to victims through close consultation

ಲೋಕದರ್ಶನ ವರದಿ    

ಹಾವೇರಿ 01 : ಆಪ್ತ ಸಮಾಲೋಚನೆಯ ಮಹತ್ವವನ್ನು ಅರಿತು ಸಂತ್ರಸ್ತರಿಗೆ ಅಗತ್ಯ ಸಮಯದಲ್ಲಿ ಸೂಕ್ತ ಸಮಾಲೋಚನೆ ನೀಡುವುದರಿಂದ ಅವರಿಗೆ ಮಾನಸಿಕ ಧೈರ್ಯ ಹಾಗೂ ನೆರವು ದೊರೆಯುತ್ತದೆ ಎಂದು ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀಮತಿ ಶ್ರೀಶೈಲಜಾ ಎಚ್‌.ವಿ. ಹೇಳಿದರು.  

ನಗರದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಭಾಭವನದಲ್ಲಿ ಮಂಗಳವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಜಿಲ್ಲಾ ವಕೀಲರ ಸಂಘದ ಸಹಯೋಗದಲ್ಲಿ ಮಕ್ಕಳ ಪಾಲನಾ ಸಂಸ್ಥೆಗಳ ಅಧಿಕಾರಿ-ಸಿಬ್ಬಂದಿ, ಮಕ್ಕಳ ರಕ್ಷಣಾ ಘಟಕ ಮತ್ತು ಮಕ್ಕಳ ಸಹಾಯವಾಣಿ ಸಿಬ್ಬಂದಿಗಾಗಿ ಆಯೋಜಿಸಿದ್ದ ಆಪ್ತ ಸಮಾಲೋಚನೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗೂ ಪೋಕ್ಸೋ ಕಾಯ್ದೆ ಕುರಿತು ಕಾನೂನು ಅರಿವು ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.  

ಕಾರ್ಯಾಗಾರದಲ್ಲಿ ಭಾಗವಹಿಸುವ ಮೂಲಕ ಸಿಬ್ಬಂದಿ ತಮ್ಮ ಕಾರ್ಯಕ್ಷಮತೆಯನ್ನು ಹೆಚ್ಚಿಸಿಕೊಳ್ಳಬೇಕು. ಇದರಿಂದ ಸಮಾಜಕ್ಕೆ ಹಾಗೂ ಸಂತ್ರಸ್ತ ಮಕ್ಕಳಿಗೆ ಉತ್ತಮ ಸೇವೆ ನೀಡಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.