ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಅನುಷ್ಠಾನಕ್ಕೆ ಒತ್ತಾಯ
ಬೆಂಗಳೂರು, ಡಿ.11 : ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಅನುಷ್ಠಾನ ಸೇರಿ ಮಾದಿಗ ಸಮುದಾಯದ ವಿವಿಧ ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸಲು ಮುಂದಾಗಬೇಕು ಎಂದು ಬೃಹನ್ಮಠದ ಆದಿಜಾಂಬವ ಪೀಠಾಧಿಪತಿ ಜಾಂಬವಶ್ರೀ ಬ್ರಹ್ಮಾನಂದಮುನಿ ಸ್ವಾಮೀಜಿ ಒತ್ತಾಯಿಸಿದ್ದಾರೆ.
ನಗರದ ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ಆದಿಜಾಂಬವ(ಮಾದಿಗ) ಸಂಘಟನೆ ಒಕ್ಕೂಟದಿಂದ ನಡೆದ ಮಾದಿಗ ಸಮುದಾಯ, ಮುಖಂಡರ ಬೃಹತ್ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ ಸಮುದಾಯಗಳ ಪೈಕಿ ಮಾದಿಗ ಸಮುದಾಯ ಆರ್ಥಿಕ, ರಾಜಕೀಯ, ಹಾಗೂ ಶೈಕ್ಷಣಿಕವಾಗಿ ತುಂಬಾ ಹಿಂದುಳಿದಿದ್ದು, ಎಲ್ಲಾ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಅಂಬೇಡ್ಕರ್ ಅವರು ಇಂತಹ ಸಮುದಾಯಗಳಿಗೆ ಒಳ ಮೀಸಲಾತಿ ನೀಡುವ ಮೂಲಕ ಮುಖ್ಯವಾಹಿನಿಗೆ ತರಬೇಕು ಎಂದು ಪ್ರತಿಪಾದಿಸಿದ್ದರು. ಅದು ಇಂದಿಗೂ ನನಸಾಗಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.
ಪರಿಶಿಷ್ಟ ಜಾತಿ ಎಡಗೈ ಸಮುದಾಯದ ಜನ ಸಾಕಷ್ಟು ಕಷ್ಟಗಳನ್ನು ಅನುಭವಿಸುತ್ತಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ಸಮಾಜದ ಕಟ್ಟಕಡೆಯ ವರ್ಗದವರಿಗೂ ರಕ್ಷಣೆ ನೀಡುವ ನಿಟ್ಟಿನಲ್ಲಿ ಆದಿಜಾಂಬವ ಅಧಿವೃದ್ಧಿ ನಿಗಮಕ್ಕೆ ಹೆಚ್ಚಿನ ಅನುದಾನ ನೀಡಬೇಕು ಎಂದು ಆಗ್ರಹಿಸಿದರು.
ಒಕ್ಕೂಟದ ಅಧ್ಯಕ್ಷ ಜಂಬೂದ್ವೀಪ ಸಿದ್ದರಾಜು ಮಾತನಾಡಿ, ಅವಕಾಶ ವಂಚಿತರಾಗಿ ಬದುಕುತ್ತಿರುವ ಆದಿಜಾಂಬವ ಸಮುದಾಯ ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿ ಗುರುತಿಸಲ್ಪಟ್ಟಿದ್ದರೂ ಸಂವಿಧಾನಿಕವಾಗಿ ಯಾವುದೇ ಸೌಲಭ್ಯ ಸಿಗುತ್ತಿಲ್ಲ. ಹೀಗಾಗಿ ಅವರಿಗೆ ಯಾವುದೇ ತಾರತಮ್ಯವಿಲ್ಲದೆ ಮೀಸಲಾತಿ ಸವಲತ್ತು ದೊರಕಿಸಿಕೊಡಬೇಕು. ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸರ್ಕಾರ, ಹೆಚ್ಚಿನ ಅನುದಾನ ನೀಡುವ ಜತೆಗೆ ಸದಾಶಿವ ಆಯೋಗದ ವರದಿ ಜಾರಿಗೊಳಿಸಬೇಕೆಂದು ಒತ್ತಾಯಿಸಿದರು.
ಒಳ ಮೀಸಲಾತಿ ಕುರಿತಂತೆ ನ್ಯಾ.ಎ.ಜೆ.ಸದಾಶಿವ ಆಯೋಗ ಸರ್ಕಾರಕ್ಕೆ ವರದಿ ಸಲ್ಲಿಸಿ ಹಲವು ವರ್ಷಗಳು ಕಳೆದಿದೆ. ಆದರೆ ಈವರೆಗೆ ಸರ್ಕಾರ ಆ ವರದಿಯನ್ನು ಜಾರಿಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿಲ್ಲ. ಕೂಡಲೇ ಸರ್ಕಾರ ಈ ಕುರಿತು ಕ್ರಮಕೈಗೊಳ್ಳಬೇಕು' ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಧರ್ಮಸೇನಾ, ಒಕ್ಕೂಟದ ಮುಖಂಡರು, ಸಮುದಾಯದ ನಾಯಕರು, ಸ್ವಾಮೀಜಿಗಳು ಪಾಲ್ಗೊಂಡಿದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 