ತೋಟ ರಸ್ತೆ ಕಾಮಗಾರಿಗೆ ಶಾಸಕ ದುರ್ಯೋಧನ ಐಹೊಳೆ ಚಾಲನೆ

ತೋಟ ರಸ್ತೆ ಕಾಮಗಾರಿಗೆ ಶಾಸಕ ದುರ್ಯೋಧನ ಐಹೊಳೆ ಚಾಲನೆ MLA Duryodhan Aihole drive for farm road work

ಚಿಕ್ಕೋಡಿ   07: ಗ್ರಾಮೀಣ ಭಾಗದ ರಸ್ತೆ ಸಂಪರ್ಕವನ್ನು ಮತ್ತಷ್ಟು ಸುಧಾರಿಸುವ ಉದ್ದೇಶದಿಂದ ಚಿಕ್ಕೋಡಿ ತಾಲೂಕಿನ ಕಮತೇನಹಟ್ಟಿ ಗ್ರಾಮದ ಜನರ ಬಹುದಿನಗಳ ಬೇಡಿಕೆಯಾಗಿದ್ದ  ತೋಟ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ  ದುರ್ಯೋಧನ ಐಹೊಳೆ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು.ಈ ವೇಳೆ ಮಾತನಾಡಿದ ಅವರು, ಕಮತೇನಹಟ್ಟಿ ಗ್ರಾಮದಿಂದ ಕರೋಶಿ ಮಾರ್ಗವಾಗಿ ಚಿಕ್ಕೋಡಿಗೆ ನೇರ ಸಂಪರ್ಕ ಕಲ್ಪಿಸುವ ಈ ರಸ್ತೆ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ 60 ಲಕ್ಷ ರೂ. ಅನುದಾನ ಮಂಜೂರು ಮಾಡಿದೆ.

ಕಾಮಗಾರಿ ಪೂರ್ಣಗೊಂಡ ಬಳಿಕ ಗ್ರಾಮೀಣ ಪ್ರದೇಶದ ಜನರು, ರೈತರು ಹಾಗೂ ವಿದ್ಯಾರ್ಥಿಗಳಿಗೆ ಸುಗಮ ಸಂಚಾರಕ್ಕೆ ಅನುಕೂಲವಾಗಲಿದ್ದು, ಕೃಷಿ ಉತ್ಪನ್ನಗಳನ್ನು ಮಾರುಕಟ್ಟೆಗೆ ಸಾಗಿಸಲು ಸಹ ಹೆಚ್ಚಿನ ನೆರವಾಗಲಿದೆ ಎಂದು ಹೇಳಿದರು. ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ರಸ್ತೆ, ಕುಡಿಯುವ ನೀರು, ನೀರಾವರಿ ಸೇರಿದಂತೆ ಮೂಲಸೌಕರ್ಯಗಳ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ.

ಜನರ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಹಂತ ಹಂತವಾಗಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದ್ದು, ಕ್ಷೇತ್ರದ ಪ್ರತಿಯೊಂದು ಗ್ರಾಮಕ್ಕೂ ಉತ್ತಮ ರಸ್ತೆ ಸಂಪರ್ಕ ಕಲ್ಪಿಸುವುದು ತಮ್ಮ ಸಂಕಲ್ಪವಾಗಿದೆ ಎಂದು ತಿಳಿಸಿದರು. ಮಡ್ಡಿ ಭಾಗದ ರೈತರ ಬಹುಕಾಲದ ಕನಸಾಗಿರುವ ಕರಗಾಂವ ಏತ ನೀರಾವರಿ ಯೋಜನೆ ಜಾಕ್‌ವೆಲ್ ಕಾಮಗಾರಿ ಭರದಿಂದ ಸಾಗುತ್ತಿದೆ. ಪ್ರಸ್ತುತ ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಿರುವ ಕಾರಣ ಕೆಲ ತಾಂತ್ರಿಕ ಅಡಚಣೆಗಳಿದ್ದರೂ, ನೀರಿನ ಮಟ್ಟ ಇಳಿದ ತಕ್ಷಣ ಕಾಮಗಾರಿಯನ್ನು ಇನ್ನಷ್ಟು ವೇಗಗೊಳಿಸಿ ಶೀಘ್ರ ಪೂರ್ಣಗೊಳಿಸಲಾಗುವುದು.

ಯೋಜನೆ ಪೂರ್ಣಗೊಂಡ ನಂತರ ಮಡ್ಡಿ ಭಾಗದ ಸಾವಿರಾರು ಎಕರೆ ಕೃಷಿಭೂಮಿಗೆ ನೀರಾವರಿ ಸೌಲಭ್ಯ ದೊರೆಯಲಿದ್ದು, ರೈತರ ಆರ್ಥಿಕ ಸ್ಥಿತಿ ಮತ್ತಷ್ಟು ಸದೃಢವಾಗಲಿದೆ ಎಂದು ಶಾಸಕ ದುರ್ಯೋಧನ ಐಹೊಳೆ ಹೇಳಿದರು.ಈ ಸಂದರ್ಭದಲ್ಲಿ ರುದ್ರಗೌಡ ಪಾಟೀಲ, ಸಿದಗೌಡ ಪಾಟೀಲ, ಬಸಗೌಡ ಪಾಟೀಲ, ನಾನಾಗೌಡ ಪಾಟೀಲ, ಸಂತೋಷ ಅಂಬಲೆ, ಕೃಷ್ಣಾ ಬೆಣ್ಣಿಹಳ್ಳಿ, ಸಿದ್ದು ವಠಾರೆ, ದಯಾನಂದ ಅಮ್ಮಿನಭಾವಿ, ಮಾರುತಿ ದಳವಾಯಿ, ಬಾಬುರಾವ ಪಾಟೀಲ, ಎಸ್‌.ಎಸ್‌. ಹೊಸಮನಿ ಸೇರಿದಂತೆ ಗ್ರಾಮಸ್ಥರು ಹಾಗೂ ಮುಖಂಡರು ಉಪಸ್ಥಿತರಿದ್ದರು.