ಕಳಸ ಪೂಜೆಯಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಭಾಗಿ

ಕಳಸ ಪೂಜೆಯಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಭಾಗಿ  MLA Laxmi Hebbalkar participates in Kalasa Puja


ಬೆಳಗಾವಿ ಸೆ.7: ಕಂಗ್ರಾಳಿ ಬಿ.ಕೆ. ಗ್ರಾಮದ ಕಲ್ಮೇಶ್ವರ ನಗರದಲ್ಲಿರುವ  ಸಿದ್ದೇಶ್ವರ ಮಂದಿರದಲ್ಲಿ ಶ್ರಾವಣ ಮಾಸದ ಕೊನೆಯ ಸೋಮವಾರದ ಅಂಗವಾಗಿ ಆಯೋಜಿಸಿದ್ದ ಕಳಸ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮದಲ್ಲಿ ಮಾಜಿ ಸಚಿವೆ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿದರು.  

ಈ ಸಂದರ್ಭದಲ್ಲಿ ನಾಡಿನ ಜನರ ಸುಖ, ಶಾಂತಿ, ಆರೋಗ್ಯ, ಸಮೃದ್ಧಿ ಹಾಗೂ ಸರ್ವತೋಮುಖ ಅಭಿವೃದ್ಧಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಹಾಗೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.  

ನಂತರ ಮಂದಿರದ ನಿರ್ಮಾಣ ಹಾಗೂ ಜೀರ್ಣೋದ್ಧಾರ ಕಾಮಗಾರಿಗಳನ್ನು ವೀಕ್ಷಿಸಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ, ದೇವಸ್ಥಾನದ ಅಭಿವೃದ್ಧಿ ಮತ್ತು ಜೀರ್ಣೋದ್ಧಾರಕ್ಕಾಗಿ ಸರ್ಕಾರದಿಂದ 50 ಲಕ್ಷ ವಿಶೇಷ ಅನುದಾನ ಬಿಡುಗಡೆ ಮಾಡಿಸುವ ಭರವಸೆ ನೀಡಿದರು.  

ಗ್ರಾಮೀಣ ಪ್ರದೇಶಗಳ ಧಾರ್ಮಿಕ ಕೇಂದ್ರಗಳು ಪೂಜಾ ಸ್ಥಳಗಳಷ್ಟೇ ಅಲ್ಲದೆ, ಜನರನ್ನು ಒಗ್ಗೂಡಿಸುವ ಹಾಗೂ ಧಾರ್ಮಿಕ-ಸಾಂಸ್ಕೃತಿಕ ಚಟುವಟಿಕೆಗಳಿಗೆ ವೇದಿಕೆಯಾಗಿವೆ. ಇಂತಹ ಪವಿತ್ರ ಸ್ಥಳಗಳ ಅಭಿವೃದ್ಧಿಗೆ ಅಗತ್ಯ ಸಹಕಾರ ನೀಡುವುದು ತಮ್ಮ ಕರ್ತವ್ಯ ಎಂದು ಅವರು ಹೇಳಿದರು.  

ಈ ಸಂದರ್ಭದಲ್ಲಿ ಗ್ರಾಮ ಮುಖಂಡರಾದ ಉಮೇಶ ನಾಯಕ್, ಲೋಹಿತ್, ರಮೇಶ ವಡರಟ್ಟಿ, ಸಾಗರ ಪಮ್ಮಾರ, ಉಮೇಶ ಗದಗ, ಚೇತನ್, ಸಿದ್ದರಾಮಯ್ಯ ಸೇರಿದಂತೆ ಮಹಿಳೆಯರು, ಭಕ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.