ಗದಗ ಜಿಲ್ಲಾಡಳಿತ ಭವನದಲ್ಲಿ ಮಹಲನೋಬಿಸ್ ದಿನಾಚರಣೆ

ಗದಗ ಜಿಲ್ಲಾಡಳಿತ ಭವನದಲ್ಲಿ ಮಹಲನೋಬಿಸ್ ದಿನಾಚರಣೆ Mahalanobis Day celebration at the Gadag District Administration Complex

ಗದಗ, ಜು.10: ಆಡಳಿತ ವ್ಯವಸ್ಥೆಯಲ್ಲಿ ಪಾರದರ್ಶಕತೆ, ದಕ್ಷತೆ ಹಾಗೂ ಪರಿಣಾಮಕಾರಿ ನಿರ್ಧಾರ ಕೈಗೊಳ್ಳಲು ನಿಖರವಾದ ಅಂಕಿ-ಅಂಶಗಳು ಮತ್ತು ಆಡಳಿತಾತ್ಮಕ ದತ್ತಾಂಶದ ಸಮರ​‍್ಕ ಬಳಕೆ ಅತ್ಯಂತ ಅವಶ್ಯಕ ಎಂದು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಸಿ.ಆರ್‌. ಮುಂಡರಗಿ ಹೇಳಿದರು. ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಕಚೇರಿ ವತಿಯಿಂದ ಭಾರತೀಯ ಸಂಖ್ಯಾಶಾಸ್ತ್ರದ ಪಿತಾಮಹ ಪ್ರೊ. ಪಿ.ಸಿ. ಮಹಲನೋಬಿಸ್ ಅವರ ಜನ್ಮದಿನದ ಅಂಗವಾಗಿ ಶುಕ್ರವಾರ ಜಿಲ್ಲಾಡಳಿತ ಭವನದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಸಂಖ್ಯಾಶಾಸ್ತ್ರ ದಿನ (ಮಹಲನೋಬಿಸ್ ದಿನಾಚರಣೆ) ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.  

ಪ್ರಸಕ್ತ ವರ್ಷದ ಧ್ಯೇಯವಾಕ್ಯವಾದ "ಆಡಳಿತಾತ್ಮಕ ದತ್ತಾಂಶದ ಸಾಮರ್ಥ್ಯವನ್ನು ಮುಕ್ತಗೊಳಿಸುವುದು" ಎಂಬ ಆಶಯವನ್ನು ಪ್ರತಿಯೊಂದು ಸರ್ಕಾರಿ ಕಚೇರಿಯ ಕಾರ್ಯವೈಖರಿಯಲ್ಲಿ ಅಳವಡಿಸಿಕೊಳ್ಳಬೇಕಿದೆ. ಆಡಳಿತ ಪ್ರಕ್ರಿಯೆಗಳ ಪ್ರತಿಯೊಂದು ಹಂತದಲ್ಲೂ ನಿಖರವಾದ ಅಂಕಿ-ಅಂಶಗಳು ಮತ್ತು ವಿಶ್ವಾಸಾರ್ಹ ದತ್ತಾಂಶಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಂಡಾಗ ಮಾತ್ರ ಜನಸ್ನೇಹಿ, ಪಾರದರ್ಶಕ ಹಾಗೂ ಜವಾಬ್ದಾರಿಯುತ ಆಡಳಿತ ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು.  

ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದ ಜಿಲ್ಲಾ ತರಬೇತಿ ಕೇಂದ್ರದ ಪ್ರಾಂಶುಪಾಲೆ ಜಯದೇವಿ ಅರಕೇರಿಮಠ ಮಾತನಾಡಿ, ಆಡಳಿತಾತ್ಮಕ ದತ್ತಾಂಶವನ್ನು ಕೇವಲ ದಾಖಲೆಗಳಾಗಿ ಸಂಗ್ರಹಿಸಿಡುವುದರಿಂದ ಪ್ರಯೋಜನವಿಲ್ಲ. ಅದರ ನೈಜ ಸಾಮರ್ಥ್ಯವನ್ನು ಅನಾವರಣಗೊಳಿಸಿ, ಕಚೇರಿಯ ದೈನಂದಿನ ನಿರ್ಧಾರಗಳಲ್ಲಿ, ಅಭಿವೃದ್ಧಿ ಯೋಜನೆಗಳ ರೂಪುರೇಷೆ ಸಿದ್ಧಪಡಿಸುವಲ್ಲಿ ಹಾಗೂ ದೇಶದ ನೀತಿ ನಿರೂಪಣೆಯಲ್ಲಿ ಪರಿಣಾಮಕಾರಿಯಾಗಿ ಬಳಸಿಕೊಳ್ಳುವುದು ಇಂದಿನ ಅಗತ್ಯವಾಗಿದೆ ಎಂದು ಹೇಳಿದರು.