ಬಳ್ಳಾರಿ 14: ಜಾತ್ಯತೀತ ಹಾಗೂ ಬಹುತ್ವ ಸಂಸ್ಕೃತಿಯು ಭಾರತದ ಬೆನ್ನೆಲುಬಾಗಿದ್ದು, ಬುದ್ಧ-ಬಸವ ಅವರ ತತ್ವಾದರ್ಶ ಹಾಗೂ ಅಂಬೇಡ್ಕರ್ ಅವರು ನೀಡಿರುವ ಸಂವಿಧಾನದಡಿ ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಎಂದು ಕಲಬುರಗಿ ಕೇಂದ್ರೀಯ ವಿಶ್ವವಿದ್ಯಾಲಯದ ಕನ್ನಡ ಪ್ರಾಧ್ಯಾಪಕರಾದ ಡಾ.ಅಪ್ಪಗೆರೆ ಸೋಮಶೇಖರ್ ಹೇಳಿದರು.
ವಿಶ್ವವಿದ್ಯಾಲಯದ ಬಯಲು ರಂಗಮಂದಿರದಲ್ಲಿ ಬುಧವಾರ ಆಯೋಜಿಸಿದ್ದ “ಬುದ್ಧ, ಬಸವ, ಅಂಬೇಡ್ಕರ್ ವಿಚಾರೋತ್ಸವ” ಕಾರ್ಯಕ್ರಮವನ್ನು ಅವರುಗಳ ಭಾವಚಿತ್ರಕ್ಕೆ ಗಣ್ಯರೊಂದಿಗೆ ಪುಪ್ಪಾರ್ಚನೆ ನೆರವೇರಿಸಿ ಅವರು ಮಾತನಾಡಿದರು.
ಬುದ್ಧ, ಬಸವ, ಅಂಬೇಡ್ಕರ್ರವರ ತತ್ವಗಳಿಂದ ಭಾರತದ ಸಂವಿಧಾನ ರಚಿತವಾಗಿದೆ. ಸಂವಿಧಾನವು ದೇಶದಲ್ಲಿರುವ ಎಲ್ಲ ವರ್ಗದವರಿಗೆ ಅನ್ವಯಿಸುತ್ತದೆ. ವ್ಯಕ್ತಿ ಮತ್ತು ಸಮುದಾಯ ಪ್ರಗತಿ ಹೊಂದಲು ನಮ್ಮಲ್ಲಿರುವ ಕೀಳರಿಮೆ ಮನಸ್ಥಿತಿಯಿಂದ ಹೊರಬರಬೇಕು. ಈ ಮೂರು ಮಹಾನ್ ವ್ಯಕ್ತಿಗಳ ಆಶಯಗಳು ಭಾರತದ ಸಂವಿಧಾನದ ರೂಪದಲ್ಲಿ ಮೂಡಿ ಬಂದಿವೆ ಎಂದು ಪ್ರತಿಬಿಂಬಿಸಿದರು.
ಬೌದ್ಧ ಸಾಹಿತಿಗಳಾದ ಆಯುಷ್ಮಾನ್ ಬುದ್ಧಘೋಷ್ ದೇವೇಂದ್ರ ಹೆಗ್ಗಡೆ ಅವರು ಮಾತನಾಡಿ, ಬುದ್ಧ ಕಾಲಾತೀತ ಪುರುಷ. ಎಲ್ಲ ಕಾಲಕ್ಕೂ ಸಾಗುವ ಬುದ್ಧನ ವಿಚಾರಗಳು ಅಂದಿನಿಂದ ಇಲ್ಲಿಯವರಗೆಗೂ ಪ್ರಸ್ತುತವಾಗಿವೆ. ಬುದ್ಧನ ಪಂಚಶೀಲವು ಎಲ್ಲ ಜಾತಿ, ಧರ್ಮ, ಜನಾಂಗಕ್ಕೆ ಬೆಳಕನ್ನು ನೀಡುವುದಾಗಿದೆ. ಪ್ರತಿಯೊಂದು ಸಮಸ್ಯೆಗೂ ಬುದ್ಧನಲ್ಲಿ ಪರಿಹಾರವಿದೆ. ಇಂದಿನ ಯುವ ಪೀಳಿಗೆಗೆ ಬುದ್ಧನ ಪರಿಚಯ ಇಲ್ಲದಂತಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.
ಸಾಹಿತಿ ಹಾಗೂ ವಿವಿಯ ಸಿಂಡಿಕೇಟ್ ಸದಸ್ಯರಾದ ಪ್ರೊ. ಅಮರೇಶ್ ನುಗಡೋಣಿ ಅವರು ಮಾತನಾಡಿ, ಬುದ್ಧ, ಬಸವ, ಅಂಬೇಡ್ಕರ್ ಚಿಂತನೆಗಳು ಮನುಷ್ಯ ಜೀವನಕ್ಕೆ ಅವಶ್ಯವಾದ ವಿಚಾರಗಳಾಗಿವೆ. ಬಸವಣ್ಣನ ಚಿಂತನೆಗಳನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕಾಗಿದೆ. ಕತ್ತಲೆಯಿಂದ ಬೆಳಕಿನಡೆಗೆ ಸಾಗಲು ಇವರ ವಿಚಾರಗಳು ಪ್ರೇರಣೆಯಾಗಿವೆ. ಬಸವಣ್ಣನವರ ವಚನಗಳು ಮತ್ತು ಅವರಲ್ಲಿದ್ದ ಜ್ಞಾನದ ಅರಿವು ಹೊಸತನದೆಡೆಗೆ ಸಾಗುವುದಾಗಿದೆ ಎಂದರು.
ವಿವಿಯ ಕುಲಪತಿಗಳಾದ ಪ್ರೊ.ಎಂ ಮುನಿರಾಜು ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಅನ್ಯಾಯಕ್ಕೆ ಒಳಗಾದ ಪ್ರತಿಯೊಂದು ಜಾತಿಗೆ ನ್ಯಾಯ ದೊರಕಿಸಿದವರು ಅಂಬೇಡ್ಕರ್ ಅವರು. ಬುದ್ಧ, ಬಸವ ಅಂಬೇಡ್ಕರ್ರವರ ವೈಚಾರಿಕತೆಗಳನ್ನು ವಿದ್ಯಾರ್ಥಿಗಳಲ್ಲಿ ಮೂಡಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ. ಅವರ ಚಿಂತನೆಗಳನ್ನು ವಿದ್ಯಾರ್ಥಿಗಳು ಅಳವಡಿಸಿಕೊಂಡು ಕುಟುಂಬ, ಸಮಾಜ, ದೇಶಕ್ಕೆ ತಮ್ಮದೇ ಆದ ಕೊಡುಗೆ ನೀಡಬೇಕೆಂದು ಕರೆ ನೀಡಿದರು.
ವಿವಿಯಲ್ಲಿ ಬುದ್ಧ, ಬಸವ ಹಾಗೂ ಅಂಬೇಡ್ಕರ್ ಭಾಷಣ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಮತ್ತು ಪ್ರಮಾಣ ಪತ್ರಗಳನ್ನು ವಿತರಿಸಲಾಗಿತ್ತು ಎಂದರು.
ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ಎನ್.ಡಿ.ವೆಂಕಮ್ಮ ಅವರು ಬುದ್ಧ ವಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ವಿವಿಯ ಕುಲಸಚಿವರಾದ ಎಸ್.ಎನ್.ರುದ್ರೇಶ್, ಮೌಲ್ಯಮಾಪನ ಕುಲಸಚಿವರಾದ ಪ್ರೊ.ಎನ್.ಎಂ ಸಾಲಿ, ಕಾರ್ಯಕ್ರಮದ ಸಂಚಾಲಕರಾದ ಪ್ರೊ.ಎನ್.ಶಾಂತನಾಯ್ಕ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮ ಪ್ರಾರಂಭಕ್ಕೂ ಮೊದಲು ವಿವಿಯ ಕುಲಸಚಿವರಾದ ಎಸ್ ಎನ್ ರುದ್ರೇಶ್ ಇವರ ನೇತೃತ್ವದಲ್ಲಿ ಬುದ್ಧ, ಬಸವ, ಅಂಬೇಡ್ಕರ್ರವರ ಭಾವಚಿತ್ರವನ್ನೊಳಗೊಂಡ ತೆರೆದ ವಾಹನ ಹಾಗೂ ಅವರುಗಳ ವೇಷಭೂಷಣ ಧರಿಸಿದ್ದ ವಿದ್ಯಾರ್ಥಿಗಳನ್ನು ಒಳಗೊಂಡ ಭವ್ಯ ಮೆರವಣಿಗೆಯು ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಡಾ.ಸುಷ್ಮಾ ಜೋಗನ್ ಹಾಗೂ ಡಾ.ಶ್ರೀದೇವಿ ಆಲೂರು ನಿರೂಪಿಸಿದರು. ಪ್ರದರ್ಶನ ಕಲೆ ಹಾಗೂ ನಾಟಕ ವಿಭಾಗದ ವತಿಯಿಂದ ಕ್ರಾಂತಿ ಗೀತೆಗಳನ್ನು ಪ್ರಸ್ತುತಪಡಿಸಲಾಯಿತು.
ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಸಂಶೋಧನಾ ವಿದ್ಯಾರ್ಥಿಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು. ಬಳಿಕ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು.