ತಂಬಾಕು ಉತ್ಪನ್ನಗಳಿಂದ ದೂರವಿರಿ: ಡಿಹೆಚ್‌ಓ ಡಾ.ಯಲ್ಲಾ ರಮೇಶ್ ಬಾಬು

Stay away from tobacco products: DHO Dr. Yalla Ramesh Babu

ತಂಬಾಕು ಉತ್ಪನ್ನಗಳಿಂದ ದೂರವಿರಿ: ಡಿಹೆಚ್‌ಓ ಡಾ.ಯಲ್ಲಾ ರಮೇಶ್ ಬಾಬು 

ಬಳ್ಳಾರಿ 31: ಸಾರ್ವಜನಿಕರು ತಂಬಾಕು ಉತ್ಪನ್ನಗಳ ಬಳಕೆಯಿಂದ ದೂರವಿರಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಹೇಳಿದರು. ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿ ಮುಂಭಾಗದಲ್ಲಿ ಏರಿ​‍್ಡಸಲಾಗಿದ್ದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತಂಬಾಕು ಸುಮಾರು 7000 ರಾಸಾಯನಿಕ ಅಂಶಗಳಿಂದ ಕೂಡಿದ್ದು, ತಂಬಾಕಿನ ಯಾವುದೇ ಪದಾರ್ಥಗಳನ್ನು ಸೇವಿಸುವುದರಿಂದ ಮನುಷ್ಯನ ಆರೋಗ್ಯದಲ್ಲಿ ಕಿಡ್ನಿಗಳ ವೈಫಲ್ಯ, ನರಗಳ ದೌರ್ಬಲ್ಯ, ಕ್ಯಾನ್ಸರ್‌ನಂತಹ ಮಾರಾಣಾಂತಿಕ ಖಾಯಿಲೆಗಳು ಉದ್ಭವಿಸುತ್ತವೆ ಎಂದು ಅವರು ತಿಳಿಸಿದರು. ತಂಬಾಕು ಉತ್ಪನ್ನಗಳ ಬಳಕೆಯನ್ನು ಗಣನೀಯವಾಗಿ ಕಡಿಮೆಗೊಳಿಸಲು ರಾಜ್ಯ ಸರ್ಕಾರವು ಅನೇಕ ಯೋಜನೆಗಳನ್ನು ರೂಪಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆ ನಿಷೇಧ, ಶಿಕ್ಷಣ ಸಂಸ್ಥೆಗಳ 100 ಮೀ. ಅಂತರದಲ್ಲಿ ತಂಬಾಕು ಮಾರಾಟ ನಿಷೇಧ, ಈ ನಿಯಮ ಉಲ್ಲಂಘಿಸಿದಲ್ಲಿ ಕೋಟ್ಪಾ-2003 ಕಾಯ್ದೆಯನ್ವಯ ದಂಡವು ವಿಧಿಸಲಾಗುತ್ತದೆ ಎಂದು ಹೇಳಿದರು. ಆರೋಗ್ಯ ಇಲಾಖೆಯ ತಂಬಾಕು ನಿಯಂತ್ರಣ ಕೋಶದ ಜೊತೆಗೂಡಿ ಅನೇಕ ಜನಜಾಗೃತಿ ಕಾರ್ಯಕ್ರಮ, ತರಬೇತಿ ಕಾರ್ಯಕ್ರಮ, ತಂಬಾಕು ಕೋಟ್ಪಾ-2003 ಕಾರ್ಯಾಚರಣೆ  ಕೈಗೊಂಡು ತಂಬಾಕು ನಿಯಂತ್ರಣ ಮಾಡುವ ನಿರಂತರ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದರು. ಜಿಲ್ಲಾ ಸರ್ವೇಕ್ಷಣಾಧಿಕಾರಿ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಕಾರ್ಯಕ್ರಮ ಅಧಿಕಾರಿಗಳಾದ ಡಾ.ಮರಿಯಂಬಿ ವಿ.ಕೆ ಅವರು ಮಾತನಾಡಿ, ತಂಬಾಕು ಉತ್ಪನ್ನಗಳ ಬಳಕೆ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರವು ಈಗಾಗಲೇ ಕಟ್ಟುನಿಟ್ಟಿನ ಕ್ರಮ ವಹಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆಗೆ ರೂ.200 ರಿಂದ ರೂ.1000 ರವರೆಗೆ ದಂಡ ವಿಧಿಸಲು ಕಟ್ಟುನಿಟ್ಟಿನ ಸೂಚನೆ ಹೊರಡಿಸಿದ್ದು, ಸರ್ಕಾರದ ನಿಯಮಗಳನ್ನು ಪಾಲಿಸುವ ಮೂಲಕ ಬಳ್ಳಾರಿ ಜಿಲ್ಲೆಯನ್ನು ತಂಬಾಕು ಮುಕ್ತ ಜಿಲ್ಲೆಯನ್ನಾಗಿ ಮಾಡಲು ಕೈಜೋಡಿಸಬೇಕು ಎಂದು ಕರೆ ನೀಡಿದರು. ಇದೇ ವೇಳೆ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ್ ದಾಸಪ್ಪನವರ ಅವರು ಪ್ರತಿಜ್ಞಾವಿಧಿ ಭೋದಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ, ವೈದ್ಯಾಧಿಕಾರಿಗಳಾದ ಡಾ.ಜಬೀನ್ ತಾಜ್, ಡಾ.ಶ್ರಾವಣಿ, ಅಧಿಕಾರಿಗಳಾದ ರಾಘವೇಂದ್ರ, ಗೋವಿಂದಪ್ಪ, ವಿರುಪಾಕ್ಷಿ, ಅಂಬದಾಸ್, ಶಿವಕುಮಾರ್, ತಿಪ್ಪೇಸ್ವಾಮಿ, ಖಾಸಿಂ, ಉಮಾ ಮಹೇಶ್ವರಿ, ಸವಿತಾ, ಶರತ್ ಬಾಬು, ಶಾಂತಮ್ಮ, ಸಿಂಧು, ನವೀನ್, ಅಜಯ್, ವೀರಭದ್ರ, ನೇತ್ರಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿಯ ಸಿಬ್ಬಂದಿ ಹಾಗೂ ಜಿಲ್ಲಾ ಸರ್ವೇಕ್ಷಣಾಧಿಕಾರಿ ಕಚೇರಿಯ ಸಿಬ್ಬಂದಿ, ಮಾನಸಿಕ ಆರೋಗ್ಯ ಕಾರ್ಯಕ್ರಮದ ಸಿಬ್ಬಂದಿ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಿಬ್ಬಂದಿ ಭಾಗವಹಿಸಿದ್ದರು.