ಭಕ್ತಾದಿಗಳಿಗೆ ಸುಸಜ್ಜಿತ ಮೂಲಭೂತ ಸೌಕರ್ಯಕ್ಕೆ ಕ್ರಮ: ಸಂಸದ ಕೆ.ರಾಜಶೇಖರ ಹಿಟ್ನಾಳ
Steps to provide well-equipped infrastructure for devotees: MP K. Rajashekar Hitnal
ಲೋಕದರ್ಶನ ವರದಿ
ವಿಜೃಂಭಣೆಯ ಶ್ರೀ ಹುಲಿಗೆಮ್ಮದೇವಿ ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ದತೆ
ಕೊಪ್ಪಳ 28: ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ 2026ನೇ ಸಾಲಿನ ವಾರ್ಷಿಕ ಜಾತ್ರಾ ಮಹೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದು, ಶ್ರೀ ಕ್ಷೇತ್ರಕ್ಕೆ ಆಗಮಿಸುವ ಭಕ್ತಾದಿಗಳಿಗೆ ಸುಸಜ್ಜಿತವಾದ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಕೊಪ್ಪಳ ಸಂಸದರಾದ ಕೆ.ರಾಜಶೇಖರ ಬಸಬರಾಜ ಹಿಟ್ನಾಳ ಹೇಳಿದರು. 2026ರ ಶ್ರೀ ಹುಲಿಗೆಮ್ಮದೇವಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರಕ್ಕೆ ಆಗಮಿಸುವ ಭಕ್ತಾದಿಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕುರಿತು ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳ ಕಛೇರಿ ಸಭಾಂಗಣದಲ್ಲಿ ಏಪ್ರಿಲ್ 28ರಂದು ಕರೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.
ರಾಜ್ಯ ಸರ್ಕಾರವು ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿದ್ದು, ಇದರಿಂದ ಶ್ರೀ ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿಗಳಾಗುತ್ತಿವೆ. ಕಳೆದ ವರ್ಷದಂತೆ ಈ ಬಾರಿಯೂ ಭಕ್ತಾದಿಗಳಿಗೆ ಸಕಲ ಸೌಲಭ್ಯಗಳನ್ನು ಕಲ್ಪಿಸಿ ಅದ್ದೂರಿಯಾಗಿ ಜಾತ್ರಾ ಮಹೋತ್ಸವವನ್ನು ಕೈಗೊಳ್ಳಲು ಉದ್ದೇಶಿಸಲಾಗಿದೆ. 2026ನೇ ಸಾಲಿನ ಜಾತ್ರಾ ಮಹೋತ್ಸವವು ಮೇ 2 ರಿಂದ ಮೇ 14ರವರೆಗೆ ಪ್ರಮುಖ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ ಮತ್ತು ಜಾತ್ರಾ ಮಹೋತ್ಸವವು ಸುಮಾರು ಒಂದು ತಿಂಗಳ ಕಾಲ ಜರುಗಲಿದ್ದು, ಈ ಸಮಯದಲ್ಲಿ ಕರ್ನಾಟಕದಾದ್ಯಂತ ಹಾಗೂ ಆಂಧ್ರ, ಮಹಾರಾಷ್ಟ್ರ ಹಾಗೂ ಇನ್ನಿತರೆ ಪ್ರದೇಶಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾದಿಗಳು ಶ್ರೀ ದೇವಿಯವರ ದರ್ಶನವನ್ನು ಪಡೆಯಲು ಆಗಮಿಸಲಿದ್ದಾರೆ ಎಂದರು.
ಕಳೆದ ವರ್ಷ ಜಾತ್ರೆಗೆ ಬರುವವರ ಸಂಖ್ಯೆಯನ್ನು ಲೆಕ್ಕಿಸಲು ಮಾಬ್ ಕೌಂಟಿಂಗ್ ಮಷಿನ್ ಅಳವಡಿಸಲಾಗುತ್ತು. ಜಾತ್ರಾ ಅವಧಿಯಲ್ಲಿ ಸುಮಾರು 28 ಲಕ್ಷ ಜನರು ಅಮ್ಮನ ದರ್ಶನ ಪಡೆದಿದ್ದಾರೆ. ಈ ಬಾರಿ 30 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯ ಭಕ್ತಾದಿಗಳು ಆಗಮಿಸುವ ನೀರೀಕ್ಷೆಯಿದೆ. ಹುಲಗಿ ಕ್ಷೇತ್ರಕ್ಕೆ ಬರುವಂತ ಭಕ್ತಾದಿಗಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಅರವಟ್ಟಿಗೆ ವ್ಯವಸ್ಥೆ, 100 ತಾತ್ಕಾಲಿಕ ಶೌಚಾಲಯ ವ್ಯವಸ್ಥೆ, ವಿಶೇಷ ದರ್ಶನ, ಸರ್ವರಿಗೂ ದರ್ಶನ ವ್ಯವಸ್ಥೆ, ವಾಹನಗಳ ಪಾರ್ಕಿಂಗ್ ವ್ಯವಸ್ಥೆ, ತುಂಗಭದ್ರ ಶಾಲೆಯಿಂದ ಮತ್ತು ಕೋರಮಂಡಲ್ ಫ್ಯಾಕ್ಟರಿಯಿಂದ ದೇವಸ್ಥಾನದ ಹಿಂಭಾಗದವರೆಗೆ ಭಕ್ತರು ಬರಲು ಉಚಿತ ಸಾರಿಗೆ ವ್ಯವಸ್ಥೆಯನ್ನು ಮಾಡಲಾಗುತ್ತಿದೆ. ಇದಲ್ಲದೆ ಮೇ 2 ರಿಂದ ಒಂದು ತಿಂಗಳುಗಳ ಕಾಲ ಮಹಾ ದಾಸೋಹ ಹಮ್ಮಿಕೊಂಡಿದ್ದು, ಭಕ್ತಾದಿಗಳಿಗೆ ಪ್ರಸಾದ ವಿತರಣೆಯನ್ನು ಅಚ್ಚುಕಟ್ಟಾಗಿ ಮಾಡಲಾಗುವುದು ಎಂದು ಹೇಳಿದರು.
ತಾತ್ಕಾಲಿಕ ವೈದ್ಯಕೀಯ ಶಿಬಿರಗಳನ್ನು ತೆರೆದು ಭಕ್ತಾಧಿಗಳಿಗೆ ಚಿಕಿತ್ಸೆ ನೀಡುವ ವ್ಯವಸ್ಥೆಯನ್ನು ಸಹ ಮಾಡಲಾಗಿದ್ದು, 2 ಆಂಬ್ಯೂಲೆನ್ಸ್ ವ್ಯವಸ್ಥೆ ಹಾಗೂ ತುರ್ತು ಅವಘಡಗಳ ನಿಯಂತ್ರಣಕ್ಕೆ ಅಗ್ನಿ ಶಾಮಕ ವಾಹನವನ್ನು ಕಾಯ್ದಿರಿಸಿಕೊಳ್ಳಲಾಗುವುದು. ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜಿಸಿಕೊಂಡು ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗುವುದು, ಮತ್ತು ಸೂಕ್ಷ್ಮ ಪ್ರದೇಶದಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲು ಕ್ರಮ ಅನುಸರಿಸಲಾಗುವುದು. ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಲು ಯೋಜನೆ ರೂಪಿಸಲಾಗಿದೆ. 7 ಎಂ.ಎಲ್.ಡಿ ನೀರನ್ನು ಪಡೆಯಲು ನೀರಾವರಿ ಇಲಾಖೆಗೆ ಮಂಜೂರಾತಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಜಾತ್ರಾ ಮಹೋತ್ಸವದಲ್ಲಿ, ಮಹಾ ದಾಸೋಹ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಮತ್ತು ಮಹಾದಾಸೋಹ, ಅಭಿವೃದ್ಧಿ ಕಾಮಗಾರಿ ಕೆಲಸಕ್ಕೆ ಉದಾರವಾಗಿ ದೇಣಿಗೆಯನ್ನು ನೀಡಿ ಸಹಕರಿಸುವಂತೆ ಸಂಸದರು ಇದೇ ವೇಳೆ ಮನವಿ ಮಾಡಿಕೊಂಡರು.
ವಿವಿಧ ಅಭಿವೃದ್ಧಿ ಕಾಮಗಾರಿಗಳು: ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಕೊಳ್ಳಲಾಗಿದ್ದು, ರೂ. 985 ಲಕ್ಷಗಳ ಅಂದಾಜು ಮೊತ್ತದ ಅಮ್ಮಾ ನಿಲಯ ವಸತಿ ಸಂಕೀರ್ಣ 2 ್ಘ 3 ನೇ ಮಹಡಿ ನಿರ್ಮಾಣ ಕಾಮಗಾರಿಗೆ ರೂ. 492.50 ಲಕ್ಷ ಗಳನ್ನು ಪ್ರಾಧಿಕಾರದಿಂದ ಒದಗಿಸಲಾಗಿದೆ. ರೂ. 999.50 ಲಕ್ಷಗಳ ಅಂದಾಜು ಮೊತ್ತದಲ್ಲಿ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಹಾಲಿ ಕಟ್ಟಡವನ್ನು ತೆರವುಗೊಳಿಸಿ ನೂತನ ದೇವಸ್ಥಾನ ನಿರ್ಮಾಣ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದ್ದು, ರೂ. 250 ಲಕ್ಷ ಗಳನ್ನು ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಬಿಡುಗಡೆ ಮಾಡಲಾಗಿದೆ. ಅದೇ ರೀತಿ ಮಹಾನಕ್ಷೆಯಲ್ಲಿ ಸೂಚಿಸಿರುವಂತೆ ವಿವಿಧ 04 ಕಡೆ ದೇವಸ್ಥಾನದ ಭಕ್ತಾಧಿಗಳ ಅನುಕೂಲಕ್ಕಾಗಿ ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕವಾಗಿ ಶೌಚಾಲಯ ಮತ್ತು ಸ್ನಾನ ಗೃಹ ನಿರ್ಮಾಣ ಕಾಮಗಾರಿಗಳನ್ನು ರೂ. 340 ಲಕ್ಷಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲಾಗಿದ್ದು, ರೂ. 170 ಲಕ್ಷಗಳನ್ನು ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಿಂದ ಬಿಡುಗಡೆ ಮಾಡಿದೆ.
ಅಲ್ಲದೇ ಮಹಾ ನಕ್ಷೆಯ ಪ್ರಕಾರ ರೂ. 1,780 ಲಕ್ಷ ಅಂದಾಜು ಮೊತ್ತದ ಕುಡಿಯುವ ನೀರು ಸರಬರಾಜು ಒಳಚರಂಡಿ ನಿರ್ಮಾಣ ಕಾಮಗಾರಿ ಮತ್ತು ರೂ. 2,950 ಲಕ್ಷ ಅಂದಾಜು ಮೊತ್ತದ ನೀರು ಸರಬರಾಜು ಒಳಚರಂಡಿ ನಿರ್ಮಾಣ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಡಿಪಿಆರ್ ಯೋಜನೆ ಪ್ರಾಧಿಕಾರದ ಪರೀಶೀಲನೆಯಲ್ಲಿರುತ್ತದೆ. ಕ್ಷೇತ್ರದ ಎರಡು ಕಡೆ ಸುಲಭ ಶೌಚಾಲಯ ನಿರ್ಮಾಣ ಕಾಮಗಾರಿಯನ್ನು ಈಗಾಗಲೇ ಪ್ರಾರಂಭಿಸಲಾಗಿರುತ್ತದೆ ಎಂದು ಸಂಸದರು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ.ಹೆಚ್.ಪ್ರಕಾಶ್ರಾವ್, ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ, ಮುಖಂಡರಾದ ಪಾಲಾಕ್ಷಪ್ಪ ಗುಂಗಾಡಿ, ಈರಣ್ಣ ಈಳಿಗೇರ ಸೇರಿದಂತೆ ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಿಬ್ಬಂದಿ ಹಾಗೂ ಇತರರು ಉಪಸ್ಥಿತರಿದ್ದರು.
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ? 