ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ  Students protest demanding the appointment of guest lecturers

ಮುಧೋಳ, ಫೆ.02: ಪ್ರಸಕ್ತ ಸಾಲಿನ ಪದವಿ ತರಗತಿಗಳು ಮೇ ತಿಂಗಳಿನಿಂದ ಆರಂಭವಾಗಿದ್ದರೂ ಇದುವರೆಗೆ ಅತಿಥಿ ಉಪನ್ಯಾಸಕರ ನೇಮಕ ಮಾಡಿಕೊಳ್ಳದ ಕಾರಣ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.  

ತಾಲೂಕು ದಂಡಾಧಿಕಾರಿ ಕಚೇರಿಗೆ ಮೆರವಣಿಗೆಯಲ್ಲಿ ಆಗಮಿಸಿದ ವಿದ್ಯಾರ್ಥಿಗಳು, ಸರ್ಕಾರವು ಪ್ರತಿ ವರ್ಷ ಅತಿಥಿ ಉಪನ್ಯಾಸಕರನ್ನು ತಾತ್ಕಾಲಿಕವಾಗಿ ನೇಮಕ ಮಾಡುವ ಪದ್ಧತಿಯನ್ನು ಕೈಬಿಟ್ಟು, ಶಾಶ್ವತ ಹಾಗೂ ನಿಯಮಿತ ನೇಮಕಾತಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಈ ಕುರಿತು ತಾಲೂಕು ದಂಡಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.  

ವಿದ್ಯಾರ್ಥಿ ಪರಿಷತ್ನ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಹನುಮಂತ ಹಳ್ಳೂರ ಮಾತನಾಡಿ, “ಪ್ರತಿ ವರ್ಷ ಪಾಠ ಬೋಧನೆಗೆ ತೊಂದರೆ ಉಂಟಾಗುತ್ತಿದೆ. ಅತಿಥಿ ಉಪನ್ಯಾಸಕರ ನೇಮಕಾತಿ ವಿಳಂಬದಿಂದ ಶೈಕ್ಷಣಿಕ ಚಟುವಟಿಕೆಗಳು ಸಮರ​‍್ಕವಾಗಿ ನಡೆಯುತ್ತಿಲ್ಲ. ಸರ್ಕಾರ ಕೂಡಲೇ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಬೇಕು” ಎಂದು ಆಗ್ರಹಿಸಿದರು.  

ನಗರ ಘಟಕದ ಕಾರ್ಯದರ್ಶಿ ಮಲ್ಲಮ್ಮ ಪಾಟೀಲ ಮಾತನಾಡಿ, “ಎರಡು ತಿಂಗಳು ಕಳೆದರೂ ತರಗತಿಗಳು ಸರಿಯಾಗಿ ನಡೆಯುತ್ತಿಲ್ಲ. ಸರ್ಕಾರ ಅತಿಥಿ ಉಪನ್ಯಾಸಕರನ್ನು ಶೀಘ್ರ ನೇಮಕ ಮಾಡಿ ಅವರಿಗೆ ಉದ್ಯೋಗ ಭದ್ರತೆ ಒದಗಿಸಬೇಕು. ರಾಜ್ಯದ ವಿಶ್ವವಿದ್ಯಾಲಯಗಳು ಹಾಗೂ ಕಾಲೇಜುಗಳಲ್ಲಿ ಖಾಲಿ ಇರುವ ಸುಮಾರು 30 ಸಾವಿರ ಹುದ್ದೆಗಳನ್ನು ಭರ್ತಿ ಮಾಡಬೇಕು” ಎಂದು ಒತ್ತಾಯಿಸಿದರು.  

ವಿಳಂಬ ಮುಂದುವರಿದರೆ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ವಿದ್ಯಾರ್ಥಿಗಳು ಎಚ್ಚರಿಸಿದರು.  ಪ್ರತಿಭಟನೆಯಲ್ಲಿ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಾದ ರಮೇಶ ಹೂಗಾರ, ಸಾವಿತ್ರಿ, ಭರತ್, ಸಂದೀಪ್, ರಾಹುಲ್, ಸುನಿಲ್ ಸೇರಿದಂತೆ ಹಲವರು ಭಾಗವಹಿಸಿದ್ದರು.