ಲೋಕದರ್ಶನ ವರದಿ
ಮೇ 5 ರಿಂದ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಸಮುದಾಯದ ಸಮೀಕ್ಷೆ -ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ
ಹಾವೇರಿ 29: ಗೌರವಾನ್ವಿತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ದಾಸ್ ಅವರ ಏಕ ವಿಚಾರಣಾ ಆಯೋಗ ಪರಿಶಿಷ್ಟ ಜಾತಿಯ ಒಳ ಮೀಸಲಾತಿ ವರ್ಗೀಕರಣ-2025ಕ್ಕೆ ಸಂಬಂಧಿಸಿದಂತೆ, ಹಾವೇರಿ ಜಿಲ್ಲೆಯಲ್ಲಿ ಮೇ 5 ರಿಂದ ಮೂರು ಹಂತದಲ್ಲಿ ಪರಿಶಿಷ್ಟ ಜಾತಿ ಸಮುದಾಯ ವಿವಿಧ ಅಂಶಗಳ ಬಗ್ಗೆ ದತ್ತಾಂಶಗಳನ್ನು ಶೇಖರಿಸಲು ಸಮೀಕ್ಷೆ ಕಾರ್ಯ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಅಧ್ಯಕ್ಷರಾದ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ತಿಳಿಸಿದ್ದಾರೆ.
ಈ ಸಮೀಕ್ಷೆ ಕಾರ್ಯಕ್ಕೆ ಪ್ರತಿ ಮತಗಟ್ಟೆಗೆ ಒಬ್ಬರಂತೆ ಗಣತಿದಾರರು, ಪ್ರತಿ 10 ರಿಂದ 12 ಗಣತಿದಾರರಿಗೆ ಓರ್ವ ಮೇಲ್ವಿಚಾರಕರನ್ನು ಹಾಗೂ ಪ್ರತಿ ವಿಧಾನಸಭಾ ಕ್ಷೇತ್ರದ ಪ್ರತಿ ಮತಗಟ್ಟೆಗೆ ಒಬ್ಬರಂತೆ ಗಣತಿದಾರರನ್ನು ನೇಮಿಸಲಾಗಿದೆ.
ಮೊದಲ ಹಂತ: ಮೇ 5 ರಿಂದ ಮೇ 17ರವರೆಗೆ ಮೊದಲ ಹಂತ ಗಣತಿ ಜರುಗಲಿದ್ದು, ಈ ಅವಧಿಯಲ್ಲಿ ನೇಮಕಗೊಂಡ ಗಣತಿದಾರರು ತಮಗೆ ವಹಿಸಿರುವ ಮತಗಟ್ಟೆ ವ್ಯಾಪ್ತಿಯಲ್ಲಿ ಬರುವ ಪರಿಶಿಷ್ಟ ಜಾತಿ ಸಮುದಾಯಗಳ ಮನೆ ಮನೆಗೆ ತೆರಳಿ ಗಣತಿ ಕಾರ್ಯಕೈಗೊಳ್ಳುವರು.
ಎರಡನೇ ಹಂತ: ಮನೆ-ಮನೆ ಗಣತಿಯಲ್ಲಿ ಬಾಕಿ ಉಳಿದವರಿಗಾಗಿ ಎರಡನೇ ಹಂತದಲ್ಲಿ ಮೇ 19 ರಿಂದ ಮೇ 21ರವರೆಗೆ ಮತಗಟ್ಟೆ ವ್ಯಾಪ್ತಿಯಲ್ಲಿ ಗುರುತಿಸಿರುವ ವಿಶೇಷ ಶಿಬಿರಗಳಿಗೆ ಪರಿಶಿಷ್ಟ ಜಾತಿ ಸಮುದಾಯದವರು ತೆರಳಿ ಗಣಿತಿದಾರರಿಗೆ ಮಾಹಿತಿ ನೀಡಬೇಕು.
ಮೂರನೇ ಹಂತ: ಮೇ 19 ರಿಂದ ಮೇ 23ರವರೆಗೆ ಮೂರನೇ ಹಂತದ ಗಣತಿ ಜರುಗಲಿದ್ದು, ಈ ಅವಧಿಯಲ್ಲಿ ಮನೆ ಮನೆ ಸಮೀಕ್ಷೆ ಹಾಗೂ ವಿಶೇಷ ಶಿಬಿರದಲ್ಲಿ ಜಾತಿಯ ಬಗ್ಗೆ ಘೋಷಣೆ ಮಾಡಿಕೊಳ್ಳದೇ ಇರುವವರು ಆನ್ಲೈನ್ ಮೂಲಕ ಸ್ವಯಂ ಘೋಷಣೆ ಮಾಡಿಕೊಳ್ಳಬೇಕು( ಸ್ವಯಂ ಘೋಷಣೆಗೆ ಆಧಾರ್ ನಂಬರ್ ಹಾಗೂ ಜಾತಿ ಪ್ರಪತ್ರದ ಆರ್.ಡಿ. ನಂಬರ್ ಕಡ್ಡಾಯವಾಗಿರುತ್ತದೆ).
ಮಾಹಿತಿ ನೀಡಿ: ಈ ಗಣತಿ ಸಮಯದಲ್ಲಿ ಗಣತಿದಾರರು ಮನೆ ಮನೆಗೆ ಭೇಟಿ ನೀಡಿ ಪರಿಶಿಷ್ಟ ಜಾತಿ ಸಮುದಾಯದ ವಿವಿಧ ಅಂಶಗಳ ಬಗ್ಗೆ ದತ್ತಾಂಶಗಳನ್ನು ಶೇಖರಿಸಲಾಗುತ್ತದೆ. ಈ ಸಮಯದಲ್ಲಿ ಸಾರ್ವಜನಿಕರು ಗಣಿದಾರರಿಗೆ ಆಧಾರ್ ಕಾರ್ಡ್, ಪಡಿತರ ಚೀಟಿ(ರೇಷನ್ ಕಾರ್ಡ್) ಮೊಬೈಲ್ ನಂಬರ್ ಕಡ್ಡಾಯವಾಗಿ ನೀಡಬೇಕು.
ಆಧಾರ್ ಕಾರ್ಡ್ ಮಾಡಿಸಿ: ಈ ಗಣತಿಯು ಪರಿಶಿಷ್ಟ ಜಾತಿಯ ಒಳಮೀಸಲಾತಿಗೆ ಸಂಬಂಧಿಸಿದ್ದರಿಂದ ಪರಿಶಿಷ್ಟ ಜಾತಿಯ ಒಳ ಪಂಗಡಗಳ ಕುರಿತು ಸ್ಪಷ್ಡವಾಗಿ ಗಣತಿದಾರರಿಗೆ ತಿಳಿಸಲು ಕೋರಲಾಗಿದೆ. ಈವರೆಗೆ ಆಧಾರ್ ಕಾರ್ಡ್ ಹೊಂದದೇ ಇರುವ ಪರಿಶಿಷ್ಟ ಜಾತಿ ಸಮುದಾಯದವರು ಗಣತಿ ಕಾರ್ಯ ಮುಕ್ತಾಯವಾಗುವುದರೊಳಗಾಗಿ ಆಧಾರ್ ಕೇಂದ್ರಗಳಿಗೆ ತೆರಳಿ ಆಧಾರ್ ಕಾರ್ಡ್ ಮಾಡಿಕೊಳ್ಳುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.