ಬೀದರ್ 17: ಜಿಲ್ಲೆಯಲ್ಲಿ ಮಳೆಯಾಗಿರುವುದರಿಂದ ರೈತರು ಬಿತ್ತನೆ ಕಾರ್ಯದಲ್ಲಿ ತೊಡಗಿದ್ದು, ಈ ಸಂದರ್ಭದಲ್ಲಿ ರೈತರಿಗೆ ಬಿತ್ತನೆ ಬೀಜದ ಕೊರತೆಯಾಗದಂತೆ ಕ್ರಮವಹಿಸಬೇಕು ಎಂದು ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ತಿಳಿಸಿದ್ದಾರೆ.
ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಮಠಾಣಾ ಗ್ರಾಮದ ಹೊರವಲಯದಲ್ಲಿ ಖಾಶೆಂಪುರ್ ಪಿ ಗ್ರಾಮದ ರಸ್ತೆಗೆ ಹೊಂದಿಕೊಂಡಿರುವ ರೈತ ಸಂಪರ್ಕ ಕೇಂದ್ರಕ್ಕೆ ಸೋಮವಾರ ಭೇಟಿ ನೀಡಿದ ಅವರು, ಬಿತ್ತನೆ ಬೀಜ ಖರೀದಿಸಲು ನೂರಾರು ಸಂಖ್ಯೆಯಲ್ಲಿ ಸೇರಿದ್ದ ರೈತರನ್ನು ಮಾತನಾಡಿಸಿ, ರೈತರ ಸಮಸ್ಯೆಗಳ ಬಗ್ಗೆ ತಿಳಿದುಕೊಂಡು, ಸಮಸ್ಯೆಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿದರು.
ರೈತರು ಬಿತ್ತನೆ ಬೀಜ ಖರೀದಿಸಲು ಬಂದಿದ್ದಾರೆ, ರೈತರ ಅವಶ್ಯಕತೆಗೆ ತಕ್ಕಂತೆ ಬಿತ್ತನೆ ಬೀಜ ಬಂದಿಲ್ಲ ಎಂಬುದು ತಿಳಿದು ಬಂದಿದೆ. ಇದಕ್ಕೆ ಕಾರಣ ಏನು ಎಂಬುದರ ಬಗ್ಗೆ ಇಲ್ಲಿನ ಸಂಬಂಧಿಸಿದ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದೇನೆ. ರೈತರಿಗೆ ಸಮಸ್ಯೆಯಾಗದಂತೆ ಬಿತ್ತನೆ ಬೀಜ ವಿತರಣೆ ಮಾಡಬೇಕು. ಬಿತ್ತನೆ ಬೀಜದ ಕೊರತೆ ಉಂಟಾದರೆ ಕೂಡಲೇ ಸಂಬಂಧಿಸಿದ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿ, ತರಿಸಿಕೊಳ್ಳಬೇಕು.
ರೈತರ ವಿಷಯದಲ್ಲಿ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡಬಾರದು, ಸೂಕ್ತ ಸಮಯದಲ್ಲೇ ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದ್ದೇನೆ ಎಂದು ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ರವರು ತಿಳಿಸಿದರು.
ಮಳೆಯಾದ ಸಂದರ್ಭದಲ್ಲೇ ರೈತರು ಬಿತ್ತನೆ ಕಾರ್ಯ ಮಾಡಬೇಕು. ಭೂಮಿ ಹಸಿ ಕಳೆದುಕೊಂಡರೆ ಬಿತ್ತಲು ಆಗುವುದಿಲ್ಲ. ಸರ್ಕಾರ ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ಬಿತ್ತನೆ ಬೀಜದ ಕೊರತೆಯಾಗದಂತೆ, ಸಮಯಕ್ಕೆ ತಕ್ಕಂತೆ ಒದಗಿಸಿಕೊಡಬೇಕು ಎಂದು ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ರವರು ಸರ್ಕಾರಕ್ಕೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಅಧಿಕಾರಿಗಳು, ಪ್ರಮುಖರಾದ ರಾಜಶೇಖರ್ ಜವಳೆ, ಅಶೋಕ್ ಕೊಡ್ಗೆ, ಬಿತ್ತನೆ ಬೀಜ ಖರೀದಿಸಲು ಆಗಮಿಸಿದ್ದ ರೈತರು ಸೇರಿದಂತೆ ಅನೇಕರು ಇದ್ದರು.