ಸವದತ್ತಿಯಲ್ಲಿ ಟ್ರಾಫಿಕ್ ಜಾಮ್‌: ಭಕ್ತರು, ಸಾರ್ವಜನಿಕರಿಗೆ ತೀವ್ರ ತೊಂದರೆ

ಸವದತ್ತಿಯಲ್ಲಿ ಟ್ರಾಫಿಕ್ ಜಾಮ್‌: ಭಕ್ತರು, ಸಾರ್ವಜನಿಕರಿಗೆ ತೀವ್ರ ತೊಂದರೆ  Traffic jam in Savadatti: Severe inconvenience for devotees and the public


ಸವದತ್ತಿ, ಸೆ. 8: ನಗರದ ಪ್ರಮುಖ ವೃತ್ತಗಳಾದ ಎಪಿಎಂಸಿ ಸರ್ಕಲ್, ಕಡಕೋಳ ಬ್ಯಾಂಕ್ ಸರ್ಕಲ್ ಹಾಗೂ ಬಸ್ ನಿಲ್ದಾಣ ರಸ್ತೆ ಮಾರ್ಗದಲ್ಲಿ ತೀವ್ರ ವಾಹನ ದಟ್ಟಣೆ ಉಂಟಾಗುತ್ತಿದ್ದು, ಸ್ಥಳೀಯ ಸಾರ್ವಜನಿಕರು ಹಾಗೂ ಹೊರರಾಜ್ಯಗಳಿಂದ ಆಗಮಿಸುತ್ತಿರುವ ಭಕ್ತರು ಭಾರಿ ತೊಂದರೆ ಅನುಭವಿಸುತ್ತಿದ್ದಾರೆ.  

ಸ್ಥಳದಲ್ಲಿ ಸೂಕ್ತ ಪೊಲೀಸ್ ಸಿಬ್ಬಂದಿ ಹಾಗೂ ಸಂಚಾರ ನಿಯಂತ್ರಕರನ್ನು ನಿಯೋಜಿಸದಿರುವುದು ಅವ್ಯವಸ್ಥೆಗೆ ಪ್ರಮುಖ ಕಾರಣವಾಗಿದೆ. ಯಾವುದೇ ಮುನ್ನೆಚ್ಚರಿಕೆ ಅಥವಾ ನಿಯಂತ್ರಣವಿಲ್ಲದೆ ಕೆಎಸ್‌ಆರ್ಟಿಸಿ ಬಸ್ಗಳು ಹಾಗೂ ಖಾಸಗಿ ವಾಹನಗಳು ಏಕಾಏಕಿ ರಸ್ತೆಗೆ ನುಗ್ಗುತ್ತಿರುವುದರಿಂದ ಗಂಟೆಗಟ್ಟಲೆ ವಾಹನಗಳು ಸಾಲುಗಟ್ಟಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ.  

ಪ್ರತಿ ಮಂಗಳವಾರ ಹಾಗೂ ಶುಕ್ರವಾರ ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರರಾಜ್ಯಗಳಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ಶ್ರೀ ರೇಣುಕಾ ಯಲ್ಲಮ್ಮ ಗುಡ್ಡಕ್ಕೆ ಆಗಮಿಸುವುದರಿಂದ ಈ ದಿನಗಳಲ್ಲಿ ವಾಹನ ದಟ್ಟಣೆ ಮತ್ತಷ್ಟು ಹೆಚ್ಚಾಗುತ್ತಿದೆ. ವಾಹನಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೇವಾಲಯಕ್ಕೆ ತೆರಳುವ ಭಕ್ತರು ಹರಸಾಹಸ ಪಡುವಂತಾಗಿದೆ.  

ವಾಹನಗಳ ನಡುವೆ ನಡೆದುಕೊಂಡು ಹೋಗಲೂ ಸರಿಯಾದ ದಾರಿ ಸಿಗದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ವೃದ್ಧರು ಹಾಗೂ ಮಹಿಳೆಯರು ತೀವ್ರ ಪರದಾಟ ನಡೆಸುತ್ತಿದ್ದಾರೆ. ಭಕ್ತರ ಸುರಕ್ಷತೆ ಹಾಗೂ ಸುಗಮ ಸಂಚಾರದ ದೃಷ್ಟಿಯಿಂದ ಸೂಕ್ತ ವ್ಯವಸ್ಥೆ ಕಲ್ಪಿಸುವ ಅಗತ್ಯವಿದೆ.  

ಸ್ಥಳೀಯ ಆಡಳಿತ ಹಾಗೂ ಪೊಲೀಸ್ ಇಲಾಖೆ ಕೂಡಲೇ ಎಚ್ಚೆತ್ತುಕೊಂಡು ಎಪಿಎಂಸಿ ಸರ್ಕಲ್ ಸೇರಿದಂತೆ ನಗರದ ಪ್ರಮುಖ ವೃತ್ತಗಳಲ್ಲಿ ಸಂಚಾರ ಪೊಲೀಸರನ್ನು ನಿಯೋಜಿಸಿ, ವಾಹನ ಸಂಚಾರವನ್ನು ವ್ಯವಸ್ಥಿತವಾಗಿ ನಿಯಂತ್ರಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.  

ಅಲ್ಲದೆ, ಮಂಗಳವಾರ ಹಾಗೂ ಶುಕ್ರವಾರ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಈ ದಿನಗಳಲ್ಲಿ ವಿಶೇಷ ಸಂಚಾರ ವ್ಯವಸ್ಥೆ ರೂಪಿಸಿ, ವಾಹನ ದಟ್ಟಣೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಸಾರ್ವಜನಿಕರು ಹಾಗೂ ಭಕ್ತರು ಒತ್ತಾಯಿಸಿದ್ದಾರೆ.