ವಾಲ್ಮಿಕಿ ನಾಯಕ ನಿಧನ ಲಂಬಾಣಿ ಸಮುದಾಯಕ್ಕೆ ತುಂಬಲಾರದ ನಷ್ಟ : ಸಚಿವ ಪ್ರಭು ಚವ್ಹಾಣ್

ಬೆಂಗಳೂರು ಮಾ 19: ಚಿತ್ತಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ವಾಲ್ಮಿಕಿ ನಾಯಕ ಅವರ ನಿಧನದ ಸುದ್ದಿ ನೋವು ತಂದಿದೆ.  ಸರಳ ಸಜ್ಜನಿಕೆಯ ರಾಜಕಾರಣಿ ಸದಾ ಸಮುದಾಯ ಮತ್ತು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದ್ದ ವಾಲ್ಮಿಕಿ ನಾಯಕ ಅವರ ನಿಧನ ಸಮುದಾಯಕ್ಕೆ ತುಂಬಲಾರದ ನಷ್ಟ ಎಂದು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ.

ಲಂಬಾಣಿ ಸಮುದಾಯದ ಒಬ್ಬ ನಾಯಕರಾಗಿ ತಾಂಡಾಗಳಲ್ಲಿ ಜನರು ಗುಳೆ ಹೋಗುವುದನ್ನು ತಡೆಯುವ ಸಾಕಷ್ಟು ಕೆಲಸಗಳನ್ನು ಮಾಡಿದ್ದರು. ಲಂಬಾಣಿ ಸಮುದಾಯ ಒಂದು ವಿಷಿಷ್ಟವಾದ ಸಮುದಾಯ ಇದರ ಅಭಿವೃದ್ಧಿಗೆ ನಾವೆಲ್ಲ ಒಗ್ಗಟ್ಟಿನ ಮಂತ್ರ ಜಪಿಸಬೇಕು ಎಂದು ಸಮುದಾಯಕ್ಕೆ ಸದಾ ಕಿವಿ ಮಾತು ಹೇಳುತ್ತಿದ್ದರು. ಸಮುದಾಯದಲ್ಲಿ ಸಾಕ್ಷರತೆಯ ಪ್ರಮಾಣ ಹೆಚ್ಚಿಸಲು ತಾಂಡಾದ ಜನರೊಂದಿಗೆ ನಿರಂತರವಾಗಿ ಸಮಾಲೋಚನೆ ನಡೆಸಿ ಅವರ ಅಭಿವೃದ್ಧಿಗೆ ಶ್ರಮವಹಿಸಿದ್ದು ಅವರ ಅಗಲಿಕೆಯಿಂದ ಲಂಬಾಣಿ ಸಮುದಾಯದ ಪ್ರಮುಖ ಕೊಂಡಿ ಕಳಚಿದಂತಾಗಿದೆ ಎಂದು ಸಚಿವರು ಹೇಳಿದರು.

ವಾಡಿಯ ಸಿಮೆಂಟ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತ ಕಾರ್ಮಿಕ ಮುಖಂಡರಾಗಿ ಬೆಳೆದು ಕಾರ್ಮಿಕರ ಅನೇಕ ಸಮಸ್ಯೆಗಳಿಗೆ ಸ್ಪಂದಿಸಿದ್ದರು. ೨೦೦೯ ರಲ್ಲಿ ಚಿತ್ತಾಪುರ ವಿಧಾನಸಭಾ ಕೇತ್ರದಿಂದ ಸ್ಪರ್ಧಿಸಿ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಸಾಕಷ್ಟು ಕೆಲಸ ಮಾಡಿದ್ದರು. ಸಮಾಜದ ಬಗ್ಗೆ ಅತೀವ ಕಾಳಜಿ ಹೊಂದಿದ್ದ ಅವರು ಅಭಿವೃದ್ಧಿಗೆ ಹೆಚ್ಚು ಶ್ರಮಿಸಿದ್ದರು.

ದೇವರು ವಾಲ್ಮಿಕಿ ನಾಯಕ ಅವರ ಕುಟುಂಬಕ್ಕೆ ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ