ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

 ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ Welcome program for first PUC students at Government Pre-University College

 ಲಕ್ಷ್ಮೇಶ್ವರ 01:  ಒಂದು ಶಾಲೆ ಅಥವಾ ಕಾಲೇಜು ಉತ್ತಮ ಫಲಿತಾಂಶ ಪಡೆಯಬೇಕಾದರೆ ಶಿಕ್ಷಕರ ಪರಿಶ್ರಮದ ಜೊತೆಗೆ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಕಡೆಗಿನ ಹೆಚ್ಚಿನ ಆಸಕ್ತಿ ಮುಖ್ಯವಾಗುತ್ತದೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.  

ಪಟ್ಟಣದ ಶಿಗ್ಲಿ ರಸ್ತೆಯಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ 2026-27ನೇ ಸಾಲಿನ ಸಾಂಸ್ಕೃತಿಕ, ಕ್ರೀಡೆ, ಎನ್‌ಎಸ್‌ಎಸ್ ಹಾಗೂ ಇತರೆ ಚಟುವಟಿಕೆಗಳ ಉದ್ಘಾಟನೆ ಮತ್ತು ಸ್ವಾಗತ ಕಾರ್ಯಕ್ರಮ ನಡೆಯಿತು.  

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಡಾ. ಚಂದ್ರು ಲಮಾಣಿ, ವಿದ್ಯಾರ್ಥಿಗಳು ಇಂದಿನ ಆಧುನಿಕ ಯುಗದಲ್ಲಿ ದೊರೆಯುತ್ತಿರುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ವಿದ್ಯಾಭ್ಯಾಸದ ಕಡೆ ಹೆಚ್ಚಿನ ಗಮನ ಹರಿಸಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.  

ಕಾಲೇಜಿನ ಪ್ರಾಚಾರ್ಯ ಡಾ. ಶ್ರೀಕಾಂತ್ ಕೆ.ಎನ್‌. ಮಾತನಾಡಿ, ಸರ್ಕಾರ ವಿದ್ಯಾರ್ಥಿಗಳಿಗಾಗಿ ಹಲವು ಸೌಲಭ್ಯಗಳನ್ನು ನೀಡುತ್ತಿದ್ದು, ಅವುಗಳನ್ನು ಬಳಸಿಕೊಂಡು ಶೈಕ್ಷಣಿಕ ಪ್ರಗತಿ ಸಾಧಿಸಬೇಕು. ಶ್ರಮ ಮತ್ತು ಆಸಕ್ತಿಯಿಂದ ಅಭ್ಯಾಸ ಮಾಡಿದರೆ ಉತ್ತಮ ಅಂಕಗಳನ್ನು ಪಡೆಯಲು ಸಾಧ್ಯ ಎಂದು ಹೇಳಿದರು.  

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಮಂಜುನಾಥ ಕೊಕ್ಕರಗುಂದಿ ಮಾತನಾಡಿ, ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಂಡು ತಮ್ಮ ಗುರಿ ಸಾಧನೆಗೆ ಶ್ರಮಿಸಬೇಕು ಎಂದರು.  

ಈ ಸಂದರ್ಭದಲ್ಲಿ ಪ್ರಸಕ್ತ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶಕ್ಕಾಗಿ ಶ್ರಮಿಸಿದ ಉಪನ್ಯಾಸಕರನ್ನು ಹಾಗೂ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕಾಲೇಜಿನ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ, ಕ್ರೀಡಾ ಮತ್ತು ಮನರಂಜನಾ ಕಾರ್ಯಕ್ರಮಗಳು ನಡೆದವು.  

ಕಾರ್ಯಕ್ರಮದಲ್ಲಿ ಸುನಿಲ್ ಮಹಾಂತಶೆಟ್ಟರ್, ತೊಂಡೇಶ ಮಾನ್ವಿ, ಬಸವರಾಜ ಚಕ್ರಸಾಲಿ, ಮೈನುದ್ದೀನ್ ಸುರಣಗಿ, ಗೀರೀಶ್ ಚೌಡರಡ್ಡಿ, ಬಿ.ಎನ್‌. ದೊಡ್ಡಮನಿ, ಬಿ.ಎಂ. ಮರಳಹಳ್ಳಿ, ಎನ್‌.ಓ. ಸತಾಪುರಿ, ಶಂಕರ್, ಎಫ್‌.ಟಿ. ಪರಮೇಶ್ವರ ಲಮಾಣಿ ಸೇರಿದಂತೆ ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.